ಚಿತ್ರದುರ್ಗ: ಕೃಷಿ ಚಟುವಟಿಕೆಗಳನ್ನು ಸ್ವಲ್ಪ ಕಡಿಮೆ ಮಾಡಿ ತೋಟಗಾರಿಕೆ ಬೆಳೆಗಳಾದ ಹೂವು, ಹಣ್ಣು, ತರಕಾರಿ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕವಾಗಿ ಸಬಲರಾಗಲು ವಿಫುಲ ಅವಕಾಶಗಳಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ವಿ.ಪಿ.ಬಡಾವಣೆಯಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲ ಆಯೋಜಿಸಿದ್ದ,32ನೇ ಫಲ-ಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ತೋಟಗಾರಿಕೆ ಬೆಳೆಗಳಲ್ಲಿ ರಾಜ್ಯದಲ್ಲಿ ಕೋಲಾರ ಜಿಲ್ಲೆಯ ಪ್ರಥಮ ಸ್ಥಾನದಲ್ಲಿದ್ದು, ಉತ್ತಮ ಆದಾಯಗಳಿಸುತ್ತಿದೆ. ಹಾಗಾಗಿ ಕೋಲಾರ ಜಿಲ್ಲೆಯ ಮಾದರಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ ಎಂದರು.
ಜಿಲ್ಲೆಯ ಮಳೆ ವರದಿ ಅವಲೋಕಿಸಿದಾಗ 10 ವರ್ಷದಲ್ಲಿ 3 ವರ್ಷ ಮಾತ್ರ ಉತ್ತಮಳೆಯಾಗಲಿದೆ. ಇನ್ನೂ 7 ವರ್ಷ ಮಳೆ ಕಡಿಮೆಯಾಗಿದೆ. ಇದನ್ನು ಮನಗಂಡು ಜಿಲ್ಲೆಯ ರೈತರು ಹೆಚ್ಚು ತೋಟಗಾರಿಕೆ ಬೆಳೆಗಳಾದ ಹೂವು, ಹಣ್ಣು-ತರಕಾರಿ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, 32ನೇ ಫಲ-ಪುಷ್ಪ ಪ್ರದರ್ಶನದಲ್ಲಿ ಹೆಣ್ಣಿಗೆ ಗೌರವ ಸೂಚಕ ಕಲಾಕೃತಿ, ಮಯೂರ ವರ್ಮ ಕಲಾಕೃತಿ, ಸ್ವಾವಲಂಬಿ ರೈತ, ವಾಣಿವಿಲಾಸ ಸಾಗರ ಅಣೆಕಟ್ಟಿನ ಕಲಾಕೃತಿ ಸೇರಿದಂತೆ ಚಿತ್ರದುರ್ಗ ಜಿಲ್ಲೆಯ ಚಿತ್ರಕಲಾವಿದರ ಕಲಾಕೃತಿಗಳನು ಪ್ರದರ್ಶಿಸಲಾಗಿದೆ. ಮೂರು ದಿನಗಳ ಕಾಲ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಾಗೋಷ್ಠಿಗಳನ್ನು ನಡೆಸಲಾಗಿದೆ.
ವಿಶೇಷವಾಗಿ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚಿಸಲಾಗಿದೆ ಎಂದರು.ಜಿಲ್ಲೆಯ ಮಳೆಯಾಶ್ರಿತ ಪ್ರದೇಶದಲ್ಲಿರುವುದರಿಂದ ಅಂತರ್ಜಲದ ಕುರಿತು ಚರ್ಚಿಸಲಾಗಿದೆ. ಜೊತೆಗೆ ಸಾಂಸ್ಕøತಿಕ ಮನೋರಂಜನೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಹಣ್ಣು ಮತ್ತು ತರಕಾರಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪ್ಯಾನ್ಸಿ ಡ್ರೆಸ್ ಸ್ಪರ್ಧೆ, ಭಾವಗೀತೆ ಹಾಗೂ ಜನಪದ ಗೀತೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ತೋಟಗಾರಿಕೆ ಸಂಘದ ಸಲಹಾ ಸಮಿತಿ ಅಧ್ಯಕ್ಷ ಜಿ.ಎಸ್.ಉಜ್ಜಿನಪ್ಪ, ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ದೀಪಾ ಭೀಮಪ್ಪ ಹೊಂಕಳಿ, ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ, ಜಲತಜ್ಞ ದೇವರಾಜ ರೆಡ್ಡಿ, ತೋಟಗಾರಿಕೆ ಸಂಘದ ಪದಾಧಿಕಾರಿಗಳು ಇದ್ದರು.