ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು 2019 ಮತ್ತು 2024ರಲ್ಲಿ ಗೆಲುವು ಸಾಧಿಸಿದ್ದ ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟು ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ರಾಗಾ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಉಪ ಚುನಾವಣೆಯಲ್ಲಿ ವಯನಾಡಿನಿಂದ ಕಣಕ್ಕಿಳಿಯಲಿದ್ದಾರೆ.
ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಹಾಗೂ ಕೆ.ಸಿ ವೇಣುಗೋಪಾಲ್ ಅವರ ಸಮ್ಮುಖದಲ್ಲಿ ನಡೆದ ಉನ್ನತ ಮಟ್ಟದ ಸಭೆ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್ ಗಾಂಧಿ ನಿರ್ಧಾರದ ಬಗ್ಗೆ ಘೋಷಣೆ ಮಾಡಿದ್ದಾರೆ. ಅವರು ವಯನಾಡ್ ಕ್ಷೇತ್ರವನ್ನು ಬಿಟ್ಟು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಿಂದಲೂ ಭರ್ಜರಿ ವಿಜಯ ಸಾಧಿಸಿದ್ದರು. ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರದಲ್ಲಿ 6,87,649 ಮತಗಳನ್ನು ಪಡೆಯುವ ಮೂಲಕ 3,90,030 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದರೆ, ವಯನಾಡ್ ಕ್ಷೇತ್ರದಲ್ಲಿ 6,47,445 ಮತಗಳನ್ನು ಪಡೆದು ಗೆಲುವು ಸಾಧಿಸಿರುವ ರಾಹುಲ್ 3,64,422 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.