ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆಯಾಗುವ (Rain In Karnataka) ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ತಮಿಳುನಾಡಿನ ಕರಾವಳಿ ಭಾಗಕ್ಕೆ ವಾಯುಭಾರ ಕುಸಿತ ಬಂದು ತಲುಪಲಿದೆ. ಈ ಹಿನ್ನೆಲೆ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ. ಬೆಳ್ಳಂಬೆಳ್ಳಗ್ಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು ಮಳೆಯಾಗುವ ಸಾಧ್ಯತೆ ಇದೆ
ತಮಿಳುನಾಡಿನ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ಅನೇಕ ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದೆ ಮತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇಂದು ಕೂಡ ಮಳೆ ಮುಂದುವರೆಯಲಿದ್ದು, ತಿರುವಳ್ಳೂರು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.