ಚಾಮರಾಜನಗರ:- ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಾನು ಟಿಕೆಟ್ ಆಕಾಂಕ್ಷಿಯೇ ಅಲ್ಲ, ಒಂದು ವೇಳೆ ಪಕ್ಷದ ವರಿಷ್ಠರು ಹೇಳಿದರೆ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಇಂದು ಮಾಧ್ಯಗಳೊಂದಿಗೆ ಮಾತನಾಡಿದ ಶೆಟ್ಟರ್, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆ ಗೊಂದಲದ ಬಗ್ಗೆಯೂ ಮಾತನಾಡಿದ್ದು, ಪ್ರೀತಂಗೌಡ ಹೇಳಿಕೆ ವೈಯುಕ್ತಿಕವಾಗಿದೆ, ಪಕ್ಷದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ, ವರಿಷ್ಠರು ಏನು ಹೇಳುತ್ತಾರೆ ಅದಕ್ಕೆ ಎಲ್ಲರೂ ತಲೆ ಭಾಗಲೇಬೇಕು ಎಂದು ನಿಲುವು ವ್ಯಕ್ತಪಡಿಸಿದರು.
ಈ ಬಗ್ಗೆ ಅಮಿತ್ ಶಾ ಅವರು ಸಭೆಯಲ್ಲಿ ಏನು ಹೇಳಿರಬಹುದು ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ, ಅವರು ಪ್ರಮುಖವಾಗಿ ಸುತ್ತೂರು ಮಠದ ಕಾರ್ಯಕ್ರಮಕ್ಕೆ ಬಂದಿದ್ದರು, ಆ ಸಮಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಕೆಲವು ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ, ಆ ಸಂದರ್ಭದಲ್ಲಿ ನಾನು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದ ಕಾರಣ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಅಲ್ಲದೇ ದೆಹಲಿಯ ಹಾದಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಲಾಟಿ ಪ್ರಹಾರ ನಡೆಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪದ ಬಗ್ಗೆ ಉತ್ತರಿಸಿದ ಜಗದೀಶ್ ಶೆಟ್ಟರ್, ಅಲಿಗೇಶನ್ ಮಾಡುವವರು ಮಾಡುತ್ತಲೇ ಇರುತ್ತಾರೆ, ಆದರೆ ವಾಸ್ತವವಾಗಿ ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಈ ಹಿಂದೆಯೂ ಸ್ಪಂದಿಸಿದೆ, ಮುಂದೆಯೂ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸ್ಪಂದನೆ ನೀಡುತ್ತಾರೆ, ರೈತರ ಜೊತೆ ಚರ್ಚೆಗೆ ಕೇಂದ್ರ ಸರ್ಕಾರ ಸಿದ್ದವಿದೆ, ರೈತ ಮುಖಂಡರು ಸಂಬಂಧಪಟ್ಟ ಸಚಿವರ ಜೊತೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.