ಬೆಂಗಳೂರು: ಬಿಜೆಪಿಯವರು (BJP) ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ (Congress) ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.
ರಾಹುಲ್ ಗಾಂಧಿ ದೇಶದ ಮನಸ್ಸುಗಳನ್ನು ಒಗ್ಗೂಡಿಸಲು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ಅವರಿಗೆ ನ್ಯಾಯ ಒದಗಿಸಲು ಮಣಿಪುರದಿಂದ ಮುಂಬೈವರೆಗೂ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ. ಭಾರತ ಜೋಡೋ ನ್ಯಾಯ ಯಾತ್ರೆ ಕುರಿತು ಪಕ್ಷದ ಮುಖಂಡರು ಚರ್ಚೆ ಮಾಡುವಾಗ ನಾನು, ಸಿದ್ದರಾಮಯ್ಯ ಅವರು ಇದ್ದೆವು. ಈ ಚಳಿ, ಬಿಸಿಲಿನಲ್ಲಿ ಹೆಜ್ಜೆ ಹಾಕಿ ಈ ದೇಶದ ಹೃದಯಗಳನ್ನು ಒಗ್ಗೂಡಿಸಬೇಕು. ಜನರ ಧ್ವನಿಯಾಗಿ, ಅವರ ಸಮಸ್ಯೆ ಬಗೆಹರಿಸಬೇಕು. ಆ ಮೂಲಕ ನ್ಯಾಯ ಒದಗಿಸಬೇಕು ಎಂಬ ನಿರ್ಣಯಕ್ಕೆ ರಾಹುಲ್ ಗಾಂಧಿ ಅವರು ಬದ್ಧರಾಗಿದ್ದಾರೆ ಎಂದು ನುಡಿದರು