ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೆ. 16ರಂದು ಸಿಂಪಲ್ ಆಗಿ ಆಪ್ತರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಯಾವ ಅಭಿಮಾನಿಗಳನ್ನೂ ಸಹ ಭೇಟಿಯಾಗದೆ ಸರಳವಾಗಿ ಕುಟುಂಬ ಮತ್ತು ಕೆಲವೇ ಕೆಲವು ಗೆಳೆಯರ ಜೊತೆಗೂಡಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬಕ್ಕೆ ಕೆಲ ದಿನಗಳ ಮುಂಚಿತವಾಗಿಯೇ ವಿಡಿಯೋ ಹಂಚಿಕೊಂಡಿದ್ದ ದರ್ಶನ್, ಅನಾರೋಗ್ಯದ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದಿದ್ದರು. ಇದೀಗ ಹುಟ್ಟುಹಬ್ಬ ಆಗಿ ಎರಡು ದಿನಗಳ ಬಳಿಕ ಪ್ರೀತಿಯ ಅಭಿಮಾನಿಗಳಿಗಾಗಿ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.
‘ಪ್ರೀತಿಯ ಸೆಲೆಬ್ರಿಟಿಗಳೇ, ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ’ ಎಂದಿದ್ದಾರೆ.
‘ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ’ ಎಂದು ದರ್ಶನ್ ಬರೆದುಕೊಂಡಿದ್ದಾರೆ.
ದರ್ಶನ್ ಜೈಲಿಗೆ ಹೋದಾಗ ಅವರ ಅಭಿಮಾನಿಗಳು, ಪೊಲೀಸ್ ಠಾಣೆ, ಜೈಲಿನ ಬಳಿ ಕಾದು ನಿಲ್ಲುತ್ತಿದ್ದರು. ದರ್ಶನ್ ಬಿಡುಗಡೆ ಆಗಲೆಂದು ಕೆಲವರು ಪೂಜೆ ಸಹ ಮಾಡಿಸಿದ್ದರು. ಅಲ್ಲದೆ ಪ್ರತಿವರ್ಷ ದರ್ಶನ್ ಬರ್ತಡೇ ಹಿನ್ನೆಲೆಯಲ್ಲಿ ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿರುವ ದರ್ಶನ್ ಅಭಿಮಾನಿಗಳು ಈ ವರ್ಷವು ಅವುಗಳನ್ನು ಮುಂದುವರೆಸಿದ್ದಾರೆ.