ಧಾರವಾಡ:- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹಠಾತ್ ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಧಾರವಾಡದಲ್ಲಿ ಚಾಲನೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಚಿಕ್ಕಮಕ್ಕಳಿಂದ ಹಿಡಿದು ಎಲ್ಲ ವಯೋಮಾನದವರಲ್ಲಿ ಹೃದಯಾಘಾತ ಕಾಣಿಸಿಕೊಂಡು ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಸಾವಿನ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ದಿ. ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ವಿನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ.
ರಾಜ್ಯ ಸರ್ಕಾರ ಡಾ.ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ʻಹೃದಯ ಜ್ಯೋತಿʼ ಯೋಜನೆ ಜಾರಿಗೆ ತಂದಿದ್ದು, 2ನೇ ಹಂತದ ಈ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಧಾರವಾಡದ ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.
ಹೃದಯಾಘಾತವಾದ ಕೆಲವೇ ಸಮಯದಲ್ಲಿ ಬಡವರಿಗೂ ಲಭ್ಯವಾಗುವ ರೀತಿಯಲ್ಲಿ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 28,000 ರೂ. ಮೌಲ್ಯದ Tenecteplase ಇಂಜಕ್ಷನ್ ಅನ್ನು ಉಚಿತವಾಗಿ ನೀಡುವ ಯೋಜನೆ ಇದಾಗಿದೆ. ಹೃದಯಾಘಾತವಾದ ಕೆಲ ಸಮಯದಲ್ಲಿ ತಕ್ಷಣ ಇಸಿಜಿ ಮಾಡುವ ಸ್ಟೆಮಿ ಕಿಟ್ ಅನ್ನೂ ಈ ಯೋಜನೆಯಡಿ ನೀಡಲಾಗುತ್ತಿದೆ. ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರದಿಂದ ಈ ಯೋಜನೆ ಜಾರಿ ಮಾಡಲಾಗಿದೆ.
ಈಗಾಗಲೇ ರಾಜ್ಯದ 15 ಜಿಲ್ಲೆಯ 71 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿ ಮಾಡಲಾಗಿದೆ. 2ನೇ ಹಂತದಲ್ಲಿ ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ ಸೇರಿದಂತೆ 36 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಈ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು