ಬೆಂಗಳೂರು: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ ಬಂಧನಕ್ಕೊಳಗಾಗಿರುವ ಕನ್ನಡ ಪರ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲವಾದರೆ ರಾಜಧಾನಿ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಕ್ರಾಂತಿಕಾರಿ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕನ್ನಡ ನಾಮಫಲಕವನ್ನು ಕಡ್ಡಾಯಗೊಳಿಸುವ ಕೆಲಸ ಸರ್ಕಾರದಿಂದ ಆಗಬೇಕಿದೆ. ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಇರಬೇಕು ಎನ್ನುವ ಕಾನೂನಿದೆ. ಅಂಗಡಿ ಪರವಾನಗಿ ಕೊಡಬೇಕಾದರೇ ಸರ್ಕಾರ ಇದನ್ನು ಪಾಲಿಸಬೇಕು. ಆದರೆ ಇಲ್ಲಿಯವರೆಗೆ ಯಾವುದೇ ಹೋಟೆಲ್, ಮಾಲ್ ಹಾಗೂ ಐಟಿಬಿಟಿ ಕಂಪನಿಗಳು ಪಾಲನೆ ಮಾಡ್ತಿಲ್ಲ.ಇದು ಸರ್ಕಾರದ ನಿರ್ಲಕ್ಷ್ಯ ಮತ್ತು ಹೊಣೆಗೇಡಿತನ ಆಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಬೆಂಗಳೂರಿನಾದ್ಯಂತ ಕಾರ್ಯಕರ್ತರು ಕನ್ನಡ ನಾಮಫಲಕಗಳನ್ನು ಬಳಸದ ಟೋಲ್ ಗಳು, ಮಾಲ್ ಅಂಗಡಿ ಮುಂಗಟ್ಟುಗಳ ನಾಮಫಲಕ ಮತ್ತು ಬ್ಯಾನರ್ಗಳ ತೆರವುಗೊಳಿಸಲು ಮುಂದಾಗಿದ್ದರು, ಈ ಘಟನೆಯಲ್ಲಿ ರಾಜ್ಯಾಧ್ಯಕ್ಷ ನಾರಾಯಣ ಗೌಡ ಮತ್ತು 29 ಕಾರ್ಯಕರ್ತರನ್ನು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲಾಗಿದೆ.