ಗದಗ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಇದೀಗ ಆಪರಾಧಿಗಳಿಗೆ ಶಿಕ್ಷೆ ಪ್ರಕಟವಾಗಿದೆ. 8 ವರ್ಷಗಳ ನಂತರ 23 ಜನರ ವಿರುದ್ಧ ಆರೋಪ ಸಾಬೀತಾಗಿದ್ದು, ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 23 ಜನ ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದೆ.
ಕಳೆದ 2017ರ ಫೆ.5ರಂದು ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣ ಸಂಬಂಧ ರವಿ ಹತ್ತಾಳ, ಮಲ್ಲಪ್ಪಾ ಹತ್ತಾಳ, ಬೀರಪ್ಪ ಬಳ್ಳಾರಿ, ಬಸವರಾಜ್ ಕೊರವನ್ನವರ, ಮಹಾಂತೇಶ ಹೊಳಲಾಪೂರ, ರಾಜು ಹೊಳಲಾಪೂರ ಸೇರಿದಂತೆ 23 ಆರೋಪಿಗಳನ್ನು ಅಪರಾಧಿಗಳೆಂದು ಕೋರ್ಟ್ ತೀರ್ಪು ನೀಡಿದ್ದು, ಶಿಕ್ಷೆ ಪ್ರಮಾಣ ಮಾ.24ರಂದು ಪ್ರಕಟಿಲಿಸಿದೆ.
ಘಟನೆಯ ವಿವರ
ಅಕ್ರಮ ಮರಳು ಸಾಗಿಸುವ ವಾಹನ ತಡೆದು ಚಾಲಕನನ್ನು ಪೋಲಿಸರು ಥಳಿಸಿದ್ದರೆಂದು ಆರೋಪಿಸಲಾಗಿತ್ತು. ಇದರಿಂದಾಗಿ ಬಟ್ಟೂರು ಗ್ರಾಮದ ಚಾಲಕ ಶಿವಪ್ಪ ಡೋಣಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ. ಸುದ್ದಿ ತಿಳಿಯುತ್ತಿದ್ದಂತೆ ಆತನ ಕುಟುಂಬಸ್ಥರು ಆಸ್ಪತ್ರೆಯಿಂದ ಶವವನ್ನು ತಂದು ಪೊಲೀಸ್ ಠಾಣೆಯ ಮುಂದೆ ಇಟ್ಟು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ತೀವ್ರಗೊಂಡು ರೊಚ್ಚಿಗೆದ್ದ ಜನರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದರು. ಗಲಾಟೆ ವೇಳೆ ಪೊಲೀಸ್ ಠಾಣೆಯಲ್ಲಿದ್ದ ಪೀಠೋಪಕರಗಳು, ಪೊಲೀಸ್ ಜೀಪ್, ಹತ್ತಾರು ದ್ವಿಚಕ್ರವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣ ನಡೆದ ನಂತರ ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದರು
ಸಂಬಂಧವೇ ಇಲ್ಲದ ಜಮೀನಿಗಾಗಿ ಕೊಲೆ ; ಅಪಘಾತವೆಂದು ಬಿಂಬಿಸಿದ್ದವರು ಕೊನೆಗೂ ಸಿಕ್ಕಿಬಿದ್ದರು..?
ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ 112 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಈ 112 ಜನರಲ್ಲಿ 8 ಜನರು ಮೃತಪಟ್ಟಿದ್ದು, ಓರ್ವ ಬಾಲಪರಾಧಿ ಇದ್ದಾನೆ. ಉಳಿದ 103 ಜನರ ಮೇಲೆ ತನಿಖೆ ನಡೆಸಲಾಗಿದ್ದು, ಅದರಲ್ಲಿ 23 ಜನರಿಗೆ ಕೋರ್ಟ್ ಶಿಕ್ಷೆಯನ್ನು ನೀಡಿದೆ. ಶಿಕ್ಷೆಗೊಳಗಾದ 23 ಜನ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಇನ್ನುಳಿದ 80 ಆರೋಪಿಗಳನ್ನು ನಿರಪರಾಧಿಗಳೆಂದು ನ್ಯಾಯಾಧೀಶರಾದ ರಾಜೇಶ್ವರ ಶೆಟ್ಟಿ ಅವರು ಆದೇಶ ಪ್ರಕಟಿಸಿದ್ದಾರೆ.