ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಗುಪ್ತಚರ ದಳ ಹಾಗೂ ಪೊಲೀಸ್ ಇಲಾಖೆಯಿಂದ ಕಾನೂನು ಕಾಪಾಡುವ ಕೆಲಸ ನಡೆಯುತ್ತಿಲ್ಲ. ಸರ್ಕಾರ ಈ ಬಗ್ಗೆ ಎಚ್ಚರ ವಹಿಸಬೇಕಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ವಿಧಾನಸಭೆಯಲ್ಲಿ ನಿಲುವಳಿ ಸೂಚನೆಯಡಿ ಮಾತನಾಡಿದ ಅವರು, ಮಾಜಿ ಸಚಿವ ಕೆ.ಗೋಪಾಲಯ್ಯ ಅವರಿಗೆ ಬೆದರಿಕೆ ಬಂದಿರುವುದು ಕಾನೂನು ಅವ್ಯವಸ್ಥೆಗೆ ಉದಾಹರಣೆ. ರಾತ್ರಿ 12 ಗಂಟೆಗೆ ಅವರಿಗೆ ಮಾಜಿ ಕಾರ್ಪೊರೇಟರ್ ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಪೊಲೀಸರು ಬಂಧಿಸಿಲ್ಲ. ಕೂಡಲೇ ಆತನನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
Gruha Lakshmi Scheme: ಅರ್ಜಿ ಸಲ್ಲಿಸಿದ್ರೂ 2000 ರೂ. ಬಂದಿಲ್ಲವೇ..? ಇದು ಕೂಡ ಕಾರಣ ಆಗಿರಬಹುದು.! ಈಗಲೇ ಸರಿಪಡಿಸಿ
ಕಾನೂನು ಸುವ್ಯವಸ್ಥೆ ಇರುವಲ್ಲಿ ಹೂಡಿಕೆ ಹರಿದುಬರುತ್ತದೆ, ಅಭಿವೃದ್ಧಿ ಸಾಧ್ಯವಾಗುತ್ತದೆ. ಆದರೆ ಉದ್ಯೋಗ ಮತ್ತು ಹೂಡಿಕೆಯ ತಾಣವಾಗಿರುವ ಕರ್ನಾಟಕ ಈಗ ಅಪರಾಧದ ನಾಡಾಗಿ ಕುಖ್ಯಾತಿ ಪಡೆಯುತ್ತಿದೆ. NCRB ವರದಿಯ ಪ್ರಕಾರ, ಕಳೆದ ವರ್ಷ 1,80,742 ಪ್ರಕರಣ ದಾಖಲಾಗಿದೆ. ಇದು ಬಿಜೆಪಿ ಅವಧಿಗಿಂತ ಶೇ.46 ಕ್ಕೂ ಅಧಿಕ. ಹಿರಿಯ ನಾಗರಿಕರ ವಿರುದ್ಧ ನಡೆದ ಅಪರಾಧಿ ಚಟುವಟಿಕೆ 50 ಸಾವಿರದಷ್ಟು ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಕರ್ನಾಟಕ 3 ನೇ ಸ್ಥಾನದಲ್ಲಿದೆ. ಬೆಂಗಳೂರು ಈಗ ಅಪರಾಧಗಳ ರಾಜಧಾನಿ, ಸೈಬರ್ ಅಪಾರಾಧಗಳ ಕೇಂದ್ರ ಎಂಬ ಕುಖ್ಯಾತಿಗೆ ಒಳಗಾಗಿದೆ. ಒಂದೇ ವರ್ಷದಲ್ಲಿ 432 ಕೋಟಿ ರೂ.ನಷ್ಟು ಸೈಬರ್ ವಂಚನೆ ನಡೆದಿದೆ. ಬಿಜೆಪಿ ಅವಧಿಯ 2020-21 ರಲ್ಲಿ 6,422 ಸೈಬರ್ ಅಪರಾಧ ಪ್ರಕರಣ ದಾಖಲಾಗಿತ್ತು. 2023 ರಲ್ಲಿ 17,623 ಪ್ರಕರಣ ದಾಖಲಾಗಿದೆ. ಬೆಂಗಳೂರು ಈಗ ಸೇಫ್ ಸಿಟಿ ಬದಲು ಕ್ರೈ ಸಿಟಿ ಎಂಬ ಹೆಸರು ಪಡೆದಿದೆ. ಕೆಎಫ್ ಡಿ ಮೊದಲಾದ ಸಂಘಟನೆಗಳ ಮೇಲಿದ್ದ ಪ್ರಕರಣ ಹಿಂಪಡೆದಿರುವುದರಿಂದ ದುಷ್ಕರ್ಮಿಗಳು ರಾಜಾರೋಷವಾಗಿ ಓಡಾಡುತ್ತಿದ್ದಾರೆ ಎಂದರು.
ಸ್ಲೀಪರ್ ಸೆಲ್ ಕೇಂದ್ರ
ಮಹಾಪುರುಷರ ಜಯಂತಿ, ರಾಜಕಾರಣಿಗಳ ಜನ್ಮದಿನದಂದು ಸಾರ್ವಜನಿಕ ಸ್ಥಳದಲ್ಲಿ ಕಟೌಟ್ ಹಾಕುತ್ತಾರೆ. ಆದರೆ ಮೊದಲ ಬಾರಿಗೆ ಕೋಲಾರದಲ್ಲಿ ಸ್ಟೀಲ್ ನಲ್ಲಿ ತಯಾರಿಸಿದ 40 ಅಡಿ ಉದ್ದದ ಲಾಂಗು, ಮಚ್ಚು ಹಾಕಲಾಗಿತ್ತು. ಎನ್ಐಎ ತಂಡ ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ಎಂಟು ಶಂಕಿತ ಉಗ್ರರನ್ನು ಪತ್ತೆ ಮಾಡಿದ್ದು, ರಾಜ್ಯದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು. ಬಳ್ಳಾರಿಯಲ್ಲಿ ಬಂಧನಕ್ಕೊಳಗಾದ ಮಹಮ್ಮದ್ ಸುಲೇಮಾನ್ ಕಿಂಗ್ ಪಿನ್ ಆಗಿದ್ದ. ಈತ ಅಮಾಯಕರನ್ನು ಧರ್ಮ ಹಾಗೂ ಹಣದ ಆಮಿಷಕ್ಕೊಳಪಡಿಸುವ ತಜ್ಞನಾಗಿದ್ದ. ಬೆಂಗಳೂರಿನ ಪುಲಕೇಶಿನಗರದಲ್ಲೂ ಶಂಕಿತರನ್ನು ಬಂಧಿಸಲಾಗಿದೆ. ಇವರೆಲ್ಲರೂ ಐಸಿಸ್ ಚಿಂತನೆಗಳನ್ನು ಹೊಂದಿರುವವರು. ನಾನು ಕೂಡ ಗೃಹ ಸಚಿವನಾಗಿ ಕೆಲಸ ಮಾಡಿದ್ದು, ಈಗ ರಾಜ್ಯ ಸ್ಲೀಪರ್ ಸೆಲ್ ಗಳ ಕೇಂದ್ರವಾಗಿದೆ ಎಂದು ತಿಳಿದು ಆತಂಕವಾಗಿದೆ ಎಂದರು.
ಗೋವಿಂದ ಕಾರಜೋಳ ಅವರು ಪತ್ರಿಕಾಗೋಷ್ಠಿ ನಡೆಸಿದಾಗ ಅವರ ಮೇಲೆ ಹಲ್ಲೆಯಾಗಿದೆ. ಗುಪ್ತಚರ ದಳ ಕೆಲಸ ಮಾಡುತ್ತಿದೆಯೋ, ಸತ್ತಿದೆಯೋ ಅಥವಾ ಐಸಿಯುನಲ್ಲಿದೆಯೋ ಎಂದು ಗೊತ್ತಾಗುತ್ತಿಲ್ಲ ಎಂದು ದೂರಿದರು.
ಚಿಕ್ಕಮಗಳೂರಿನಲ್ಲಿ ಗಲಾಟೆಯಾದಾಗ ಪೊಲೀಸರೇ ಪ್ರತಿಭಟನೆಗೆ ಕುಳಿತಿದ್ದರು. ಪೊಲೀಸ್ ಇಲಾಖೆಯಲ್ಲಿ ಏನಾಗುತ್ತಿದೆ ಎಂದು ಗುಪ್ತಚರ ದಳಕ್ಕೆ ತಿಳಿಯುತ್ತಿಲ್ಲ. ಪ್ರತಿಭಟನೆ ಮಾಡಿದವರ ವಿರುದ್ಧವೂ ಕ್ರಮ ವಹಿಸಿಲ್ಲ. ವರ್ಗಾವಣೆ ದಂಧೆಯಿಂದಾಗಿ ಪೊಲೀಸರು ನೈತಿಕ ಸ್ಥೈರ್ಯ ಕಳೆದುಕೊಂಡಿದ್ದಾರೆ ಎಂದರು.
Atal Pension : ಅಟಲ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? : ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಿ
ವಂಟಮುರಿ ಪ್ರಕರಣ
ಬೆಳಗಾವಿಯ ವಂಟಮುರಿಯಲ್ಲಿ ನಡೆದ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ಇದಕ್ಕೆ ನ್ಯಾಯಾಲಯ ಕೂಡ ಖೇದ ವ್ಯಕ್ತಪಡಿಸಿದೆ. ಈ ಘಟನೆ ಅಧಿವೇಶನದಲ್ಲಿ ಚರ್ಚೆಯೇ ಆಗದಂತೆ ಪೊಲೀಸರು ಮರೆಯಾಗಿಸಿ ಇಟ್ಟಿದ್ದರು. ಮನೆಗೆ ನುಗ್ಗಿ ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ ಹೊಡೆದರೂ ಅದು ಪೊಲೀಸರಿಗೆ ತಿಳಿಯಲಿಲ್ಲ. ಸಿನಿಮಾದಂತೆಯೇ ಎಲ್ಲ ಘಟನೆ ನಡೆದ ನಂತರ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಇದು ಕೂಡ ಉಚಿತ ಭಾಗ್ಯವೇ ಎಂದು ಪ್ರಶ್ನಿಸಿದರು.
ಪೊಲೀಸರು ಈ ಪ್ರಕರಣದಲ್ಲಿ 13 ಜನರನ್ನು ಬಂಧಿಸಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿರಲಿಲ್ಲ. ಇದು ಸರ್ಕಾರದ ನಡೆಗೆ ಒಂದು ಕನ್ನಡಿ ಎಂದರು.
ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮಕ್ಕಳ ಕೈಯಲ್ಲಿ ಶೌಚಾಲಯ ತೊಳೆಸಲಾಗಿದೆ. ನಾನು ಅಲ್ಲಿಗೆ ಭೇಟಿ ನೀಡಿದ್ದು, ಅಲ್ಲಿಂದ ಅನಿಲ ಹೊರ ಬರುತ್ತಿರುವುದನ್ನು ಗಮನಿಸಿದ್ದೇನೆ. ಆ ವಾಸನೆಗೆ ಯಾರಾದರೂ ಮೂರ್ಛೆ ಹೋಗುತ್ತಾರೆ. ಮಕ್ಕಳ ಕೈಯಲ್ಲಿ ಶಿಕ್ಷಕರು ಆ ಕೆಲಸ ಮಾಡಿಸುವುದರೊಂದಿಗೆ ಕೈಗವಸು ಕೂಡ ನೀಡಲಿಲ್ಲ. 300-400 ವಿದ್ಯಾರ್ಥಿಗಳಿರುವ ಈ ಶಾಲೆಗೆ ಎರಡೂವರೆ ಲೀಟರ್ ಹಾಲು ಮಾತ್ರ ಬರುತ್ತಿದೆ. ಬಿದಿರು ಕಡ್ಡಿ ತರಲು ಮಕ್ಕಳನ್ನೇ ಕಳುಹಿಸುತ್ತಾರೆ. ಇಷ್ಟೆಲ್ಲ ಆದರೂ ಸರ್ಕಾರ ಕೆಲವರನ್ನು ಅಮಾನತು ಮಾಡಿ ಸುಮ್ಮನಾಯಿತು. ಇನ್ನೂ ಎಷ್ಟೋ ಶಾಲೆಗಳಲ್ಲಿ ಇದೇ ರೀತಿ ನಡೆಯುತ್ತಿದೆ ಎಂದರು.
ಬೆಂಗಳೂರಿನ ಆಂದ್ರಹಳ್ಳಿಯ ಶಾಲೆಗೂ ನಾನು ಭೇಟಿ ನೀಡಿದ್ದೆ. ಚಿಕ್ಕಿ, ಮೊಟ್ಟೆ ನೀಡುತ್ತೇವೆ ಎಂದು ರಾಜ್ಯಪಾಲರ ಭಾಷಣದಲ್ಲಿ ಹೇಳುತ್ತಾರೆ. ಆದರೆ ಆ ಶಾಲೆಯಲ್ಲಿ ಚಿಕ್ಕಿ ನೀಡಿ ಮಕ್ಕಳ ಕೈಯಲ್ಲಿ ಪ್ರಾಂಶುಪಾಲರು ಶೌಚಾಲಯ ಸ್ವಚ್ಛಗೊಳಿಸುತ್ತಿದ್ದಾರೆ. ಚಿಕ್ಕಿ ಕೊಟ್ಟು ಮಕ್ಕಳ ಕೈಯಲ್ಲಿ ಸ್ವಚ್ಛ ಮಾಡಿಸುವಷ್ಟು ಸರ್ಕಾರ ಪಾಪರ್ ಆಗಿದೆಯೇ ಎಂದು ಪ್ರಶ್ನಿಸಿದರು.