ಬೆಂಗಳೂರು:- ಕರ್ನಾಟಕ ವಿಧಾನ ಪರಿಷತ್ತು ಚುನಾವಣೆಗೆ ಕಾಂಗ್ರೆಸ್ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಿದೆ. ಹಿರಿಯರು, ಹಾಲಿ ಸದಸ್ಯರಿಗೆ ಆದ್ಯತೆ ನೀಡಲಾಗಿದೆ.
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಸಂಖ್ಯಾಬಲದ ಮೇಲೆ ಒಟ್ಟು 11ರಲ್ಲಿ ಏಳು ಸ್ಥಾನಗಳು ಕಾಂಗ್ರೆಸ್ಗೆ ಸಿಗಲಿದ್ದು, ಆ ಸ್ಥಾನಗಳಿಗೆ ಇದೀಗ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನು ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನ ಆಯ್ಕೆ ಮಾಡಿದೆ.
ಮೂಲಗಳ ಪ್ರಕಾರ ಸಮುದಾಯಗಳ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಒಕ್ಕಲಿಗ ಸಮುದಾಯದಿಂದ ಈಗಿರುವ ಗೋವಿಂದರಾಜ್ ಅವರನ್ನೇ ಮತ್ತೊಂದು ಅವಧಿಗೆ ಮುಂದುವರಿಸಿದೆ. ಒಬಿಸಿ ಸಮುದಾಯದಿಂದ ಯತೀಂದ್ರ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಸಮುದಾಯದಿಂದ ವಸಂತಕುಮಾರ್, ರೆಡ್ಡಿ ಸಮುದಾಯದಿಂದ ಹಾಲಿ ಸಚಿವ ಎನ್ಎಸ್ ಬೋಸರಾಜು, ಜಗದೇವ್ ಗುತ್ತೇದಾರ್ ಅವರಿಗೆ ಮಣೆ ಹಾಕಿದೆ.
ಇನ್ನು ಈ ಏಳು ಪರಿಷತ್ ಸ್ಥಾನಗಳಿಗೆ ಮಾತ್ರವಲ್ಲದೇ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೂ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಆದ್ರೆ, ಉಪಚುನಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಮುಂಚಿತವಾಗಿಯೇ ಕಾಂಗ್ರೆಸ್ ಹೈಕಮಾಂಡ್ ಮಾಜಿ ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಅವರನ್ನು ಆಯ್ಕೆ ಮಾಡಿದೆ.