ಬೆಂಗಳೂರು:- ಭೂ ವಂಚನೆ ತಡೆಗೆ ಪಹಣಿ-ಆಧಾರ್ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾರ್ ಜೋಡಣೆ ಕೈಗೊಳ್ಳಲಾಗುತ್ತಿದೆ. ಈ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಬೇಕು. ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿ ಭೂ ಮಂಜೂರಾತಿ ರದ್ದುಪಡಿಸಬೇಕು. ಭೂಮಿಯ ಸ್ವಾಧೀನ ಹೊಂದಿರುವವರಿಗೆ ಮಂಜೂರು ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.
ವಿವಿಧ ಇಲಾಖೆಗಳಿಗೆ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಭೂಮಿ ಪಡೆಯಲು ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ತಮ್ಮ ಅಗತ್ಯತೆಯನ್ನು ವಿವರಿಸುವಂತೆ ಸೂಚಿಸಿದರು. ಜಿಲ್ಲಾಧಿಕಾರಿಗಳು ಸಹ ಈ ಅಗತ್ಯತೆಗಳಿಗೆ ತಕ್ಕಂತೆ ಭೂಮಿ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.