ಮುಂಬೈ: ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮರಾಠ ಸಮಯದಾಯದ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬಳಿಕ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ (Manoj Jarange Patil) ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ. ಹಿಂದುಳಿದ ವರ್ಗಗಳ ಅಡಿಯಲ್ಲಿ ಮರಾಠ ಸಮಯದಾಯಕ್ಕೆ (Maratha Community) ಶಿಕ್ಷಣ ಮತ್ತು ಉದ್ಯೋಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಂಬೈನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.
ಮಹಾರಾಷ್ಟ್ರ ಸರ್ಕಾರವು (Maharashtra Government) ನಮ್ಮ ಮನವಿಯನ್ನು ಸ್ವೀಕರಿಸಿದೆ ಎಂದು ಹೇಳಿ ಪಾಟೀಲ್ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು. ಮುಖ್ಯಮಂತ್ರಿಗಳ ಕೈಯಿಂದ ತಂಪು ಪಾನೀಯ (ಜ್ಯೂಸ್) ಕುಡಿಯುವ ಮೂಲಕ ಉಪವಾಸ ಅಂತ್ಯಗೊಳಿಸಿದರು. ಈ ವೇಳೆ ಮಾತನಾಡಿ, ಸಿಎಂ ಏಕನಾಥ್ ಶಿಂಧೆ (Eknath Shinde) ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ನಮ್ಮ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಇದರಿಂದ ನಮ್ಮ ಪ್ರತಿಭಟನೆ ಮುಗಿದಿದೆ ಎಂದು ತಿಳಿಸಿದ್ದಾರೆ.
ಬೇಡಿಕೆಗಳಿಗೆ ಸರ್ಕಾರ ಅಸ್ತು:
ಜನವರಿ 20 ರಂದು ಜಾಲ್ನಾದಿಂದ ಆರಂಭವಾದ ಮೀಸಲಾತಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ಶನಿವಾರ ಮುಂಬೈ ನಗರ ಪ್ರವೇಶಿಸಲು ಸಜ್ಜಾಗಿತ್ತು. ಅಷ್ಟರಲ್ಲಿ ಮಹಾರಾಷ್ಟ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದು, ಪ್ರತಿಭಟನೆ ಸುಖಾಂತ್ಯ ಕಂಡಿದೆ. ನಂತರ ಮಹಾರಾಷ್ಟ್ರ ಸರ್ಕಾರವು ಜಾತಿ ಮೀಸಲಾತಿ ಕುರಿತು ಸರ್ಕಾರಿ ನಿರ್ಣಯ (GR) ಹೊರಡಿಸಿದ್ದು, ಸಚಿವರಾದ ದೀಪಕ್ ಕೇಸರ್ಕರ್ ಮತ್ತು ಮಂಗಲ್ ಪ್ರಭಾತ್ ಲೋಧಾ ಅವರು ಮನೋಜ್ ಜಾರಂಗೆ ಪಾಟೀಲ್ ಅವರ ಎಲ್ಲಾ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ ಎಂದು ಪತ್ರ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಸಚಿವರು, ಮರಾಠ ಮೀಸಲಾತಿಗಾಗಿ ಮನೋಜ್ ಜಾರಂಗೆ ನೇತೃತ್ವದಲ್ಲಿ ನಡೆಯುತ್ತಿದ್ದ ಚಳವಳಿಗೆ ಇಂದು ಪರಿಹಾರ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಿದ್ದು, ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ. ಪರಿಹಾರ ಸಿಕ್ಕಿರುವುದರಿಂದ ಪ್ರತಿಭಟನೆ ಅಂತ್ಯಗೊಳಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.