ಚಿತ್ರದುರ್ಗ, ಅ.16- ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಕೋಟೆನಾಡು ಚಿತ್ರದುರ್ಗದಲ್ಲಿ ಮಾದಿಗ ಸಮುದಾಯದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಗಾಂಧಿ ಸರ್ಕಲ್ ನಿಂದ ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಮಾದಿಗ ಸಮುದಾಯದ ಸಾವಿರಾರು ಕಾರ್ಯಕರ್ತರು ಓಬವ್ವ ವೃತ್ತದ ವರೆಗೆ ಮೆರವಣಿಗೆ ಮೂಲಕ ತೆರಳಿ,
ಮಾನವ ಸರಪಳಿ ನಿರ್ಮಿಸಿ, ಮಾದಿಗ ಸಮುದಾಯಕ್ಕೆ ಸಿಗಬೇಕಾದ ಸ್ಥಾನಮಾನಗಳು ದೊರೆಯಬೇಕು. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆದೇಶದಂತೆ ಒಳ ಮೀಸಲಾತಿಯನ್ನು ಶೀಘ್ರವೇ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು. ಇದೇ ವೇಳೆ, ಮಾದಿಗ ಸಮುದಾಯದ ಸಾವಿರಾರು ಜನರು ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಸಿದ್ದರಾಮಯ್ಯ,
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹಾದೇವಪ್ಪ ಅವರ ವಿರುದ್ಧ ಘೋಷಣೆ ಕೂಗಿ ಅಣಕು ಶವಯಾತ್ರೆ ನಡೆಸಿ,ಸರ್ಕಾರದ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ, ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ, ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ನೀಡಿದರು. ಪ್ರತಿಭಟನೆಯಲ್ಲಿ, ಮಾದಿಗ ಸಮುದಾಯದ ಮುಖಂಡರಾದ, ಹನುಮಂತಪ್ಪ ದುರ್ಗ, ಕೆ.ಟಿ. ಶಿವಕುಮಾರ್, ಬಿರಾವರ ಪ್ರಕಾಶ್, ಚಳ್ಳಕೆರೆ ಶಿವಮೂರ್ತಿ, ಮೋಹನ್, ಡಿ ಓ ಮುರಾರ್ಜಿ, ತಿಪ್ಪೇಸ್ವಾಮಿ ಸೇರಿದಂತೆ, ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ವರದಿ: ಹನುಮಂತರಾಜು, ಚಿತ್ರದುರ್ಗ