ಹುಬ್ಬಳ್ಳಿ : ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿದ ಕುರಿತು ಹಲವಾರು ಪ್ರಕರಣಗಳು ದಾಖಲಾಗಿವೆ. ಅವುಗಳನ್ನು ಶೀಘ್ರಗತಿಯಲ್ಲಿ ಪರಿಶೀಲಿಸಿ, ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.
ಬೆಂಗಳೂರಿನ ಹಲವು ಪ್ರದೇಶದಲ್ಲಿ ಸೋಮವಾರ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ!?
ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಧಾರವಾಡ ಹಾಗೂ ಬೆಳಗಾವಿ ವೃತ್ತದ ಅಧಿಕಾರಿಗಳ ಸಭೆ ಜರುಗಿಸಿ ಅವರು ಮಾತನಾಡಿದರು.
ಅರಣ್ಯ ಸಂರಕ್ಷಣೆ ಮಾಡುವುದು ತುಂಬಾ ಅಗತ್ಯವಾಗಿದೆ. ಈ ಭಾಗದಲ್ಲಿ ಲಕ್ಷಾಂತರ ಸಸಿಗಳನ್ನು ನೆಡಲಾಗಿದೆ. ಅವುಗಳ ಸಂರಕ್ಷಣೆ, ಪಾಲನೆ ಪೋಷಣೆ, ಸಸಿಗಳ ತಪಾಸಣೆ ನಡೆಸಿ ನಿಖರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ. ಅರಣ್ಯ ಒತ್ತುವರಿ ಪ್ರಕರಣಗಳು ಹೆಚ್ಚಾಗಿವೆ. 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ ಕಲ್ಪಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಅರಣ್ಯ ಭೂ ಕಾಯ್ದೆಯಡಿ ಅರ್ಜಿ ಸಲ್ಲಿಸಿ, ಇತ್ಯರ್ಥವಾಗದಿದ್ದರೆ ಅವುಗಳನ್ನು ಸಹ ತೆರವುಗೊಳಿಸುತ್ತಿಲ್ಲ.
2015 ರ ನಂತರ ದೊಡ್ಡ ದೊಡ್ಡ ಅರಣ್ಯ ಒತ್ತುವರಿ ಮಾಡಿಕೊಂಡವರನ್ನು ನಿರ್ದಾಕ್ಷಿಣ್ಯವಾಗಿ ಒತ್ತುವರಿ ತೆರವುಗೊಳಿಸಬೇಕು. ಮಂಗಳಗಟ್ಟಿ ತರಬೇತಿ ಕೇಂದ್ರದಲ್ಲಿ ಅರಣ್ಯ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ. ಈ ಕೇಂದ್ರವನ್ನು ಆಧುನಿಕ ರೀತಿಯಲ್ಲಿ ತರಬೇತಿ ನೀಡುವ ಕೇಂದ್ರವನ್ನಾಗಿ ಮಾಡಲು ಯೋಜನೆ ರೂಪಿಸಬೇಕಿದೆ. ಜನರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಮರ ಕಡಿಯುವ ಪ್ರಕ್ರಿಯೆ ಸೇರಿದಂತೆ ವಿವಿಧ ಬಗೆಯ ಪ್ರಕ್ರಿಯೆಗಳು ಸರಳೀಕರಣವಾಗಬೇಕು. ಜನಸ್ನೇಹಿಯಾಗಬೇಕು.
ಅರಣ್ಯ ಕಾಯ್ದೆಗಳು ಬಹಳಷ್ಟು ಕಠಿಣವಾಗಿವೆ. ಅವುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಆಯೋಜನೆ ಆಗಬೇಕು. ಹಲವಾರು ಪ್ರಕರಣಗಳನ್ನು ಸರ್ಕಾರ ಇತ್ಯರ್ಥ ಪಡಿಸಿ ಮೀಸಲು ಅರಣ್ಯ ಪ್ರದೇಶ ಎಂದು ಘೋಷಣೆ ಮಾಡಬೇಕಿದೆ. ಅಲ್ಲದೇ ತನಿಖೆ ಹಂತದ ಪ್ರಕರಣಗಳು ಶೀಘ್ರಗತಿಯಲ್ಲಿ ವಿಲೇವಾರಿಯಾಗಬೇಕಿವೆ ಎಂದರು.
ಹಸಿರು ಹೊದಿಕೆ ಕಡಿಮೆ ಇರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಸಿಗಳನ್ನು ನೆಡಬೇಕಾಗಿದೆ. ವಿಜಯಪುರ(ಶೇ.1), ಬಾಗಲಕೋಟೆ(ಶೇ.12) ಮತ್ತು ಗೋಕಾಕ (ಶೇ.5) ಸೇರಿದಂತೆ ವಿವಿಧೆಡೆ ಕಡಿಮೆ ಹಸಿರು ಹೊದಿಕೆಯಿದೆ. ಹೀಗಾಗಿ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಗಿದೆ. ಅಲ್ಲದೇ ರೂ.100 ಕೋಟಿ ಹೆಚ್ಚುವರಿ ಅನುದಾನವನ್ನು ಅರಣ್ಯ ಹೆಚ್ಚಳ ಮಾಡಲು ನೀಡಬೇಕು ಎಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ, ಉತ್ತರ ಭಾಗದಲ್ಲಿ ಅರಣ್ಯ ಕ್ಷೇತ್ರ ಕಡಿಮೆಯಿರುವುದರಿಂದ ರಸ್ತೆ ಬದಿ, ಸರ್ಕಾರಿ ಜಮೀನು, ಉದ್ಯಾನಗಳಲ್ಲಿ ಹೆಚ್ಚಾಗಿ ಸಸಿಗಳನ್ನು ನೆಟ್ಟು, ಹಸಿರು ಹೊದಿಕೆಯನ್ನು ಹೆಚ್ಚಳ ಮಾಡಲಾಗುವುದು. ಅರಣ್ಯದ ಆದಾಯ ಹೆಚ್ಚಳಕ್ಕೆ ಕ್ರಮ ವಹಿಸುವಂತೆ ಸಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ. ಅರಣ್ಯದ ನಿಯಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳಬೇಕು. ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಸಸಿ ನೆಡುವ ಬಗ್ಗೆ ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಪ್ರಸ್ತಾವನೆಯನ್ನು ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಿ, ಅಗತ್ಯವಿರುವ ಅನುದಾನ ಬಿಡುಗಡೆಗೆ ಪ್ರಯತ್ನ ಮಾಡುತ್ತೇನೆ ಎಂದು ಸಚಿವರು ಭರವಸೆ ನೀಡಿದರು.
ಮಹಾದಾಯಿ ಕಳಸಾ ಬಂಡೂರಿ ಕುರಿತ ಪ್ರಸ್ತಾವನೆ ರಾಜ್ಯ ವನ್ಯಜೀವಿ ಮಂಡಳಿಯಿಂದ ಕೇಂದ್ರ ವನ್ಯಜೀವಿ ಮಂಡಳಿಗೆ ಹೋಗಿದೆ. ಗೋವಾ ರಾಜ್ಯ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇಂತಹ ಪ್ರಕರಣಗಳಲ್ಲಿ ಅಂತರ ರಾಜ್ಯ ಸರ್ಕಾರಗಳ ಸಹಕಾರ ಮನೋಭಾವ ಹೊಂದಬೇಕು. ಈಗಾಗಲೇ ಮುಖ್ಯಮಂತ್ರಿಗಳು ಈ ಕುರಿತು ಪ್ರಧಾನಮಂತ್ರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಕಳಸಾ ಬಂಡೂರಿ ನಾಲೆಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಮಂಜೂರಾತಿ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ, ಅರಣ್ಯ ಮತ್ತು ಪರಿಸರ ಇಲಾಖೆಯ ಹಿರಿಯ, ಕಿರಿಯ ಅಧಿಕಾರಿಗಳು ಭಾಗವಹಿಸಿದ್ದರು.