ಬೆಂಗಳೂರು: ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಬಿಡುಗಡೆಗೆ ಎದ್ದಿರುವ ಗೊಂದಲ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಸಚಿವರ ಡಿನ್ನರ್ ಮೀಟಿಂಗ್ ನಡೆಯಿತು. ಎಲ್ಲಾ ಸಚಿವರನ್ನು ಊಟಕ್ಕೆ ಆಹ್ವಾನಿಸಿದ್ದ ಸಿಎಂ, ನಿಗಮ, ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಬಿಡುಗಡೆಯ ನಂತರ ಎದ್ದಿರುವ ಗೊಂದಲ ಬಗೆಹರಿಸಲು ಮುಂದಾದರು ಎಂದು ಹೇಳಲಾಗಿದೆ. ಕೆಲವು ಸಚಿವರ ಗಮನಕ್ಕೆ ತಾರದೆ ನೇಮಕಾತಿ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿತ್ತು.
ಇದೇ ವೇಳೆ, ಲೋಕಸಭಾ ಚುನಾವಣೆ ವಿಚಾರದ ಬಗ್ಗೆಯೂ ಅನೌಪಚಾರಿಕವಾಗಿ ಚರ್ಚಿಸಲಾಗಿದೆ. ಮುಂದಿನ ತಂತ್ರಗಾರಿಕೆ, ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಡಿನ್ನರ್ ಮೀಟಿಂಗ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಭಾಗವಹಿಸಿದ್ದರು. ಚುನಾವಣೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕುವ ಕುರಿತೂ ಚರ್ಚೆ ನಡೆದಿದೆ.
ಸಚಿವರಿಗೆ ಕೆಲವು ಸೂಚನೆಗಳನ್ನು ನೀಡಿದ ಸಿದ್ದರಾಮಯ್ಯ, ಕಾಂಗ್ರೆಸಿನಿಂದ ಆಗುತ್ತಿರುವ ಎಡವಟ್ಟುಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಶಾಸಕರು ಕೊಟ್ಟ ಹೇಳಿಕೆಯನ್ನು ಬಿಜೆಪಿ ದೊಡ್ಡದು ಮಾಡುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಅನಗತ್ಯ ಹೇಳಿಕೆಗಳನ್ನು ನೀಡಬೇಡಿ. ಶಾಸಕಾಂಗ ಸಭೆಯಲ್ಲಿ ಶಾಸಕರಿಗೂ ಹೇಳುತ್ತೇನೆ. ನಮ್ಮ ಮಾತು ಬಿಜೆಪಿಗೆ ಆಹಾರವಾಗಬಾರದು ಎಂದು ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.