ಬೆಳಗಾವಿ:- ಮಗನಿಗೆ ತಿಲಕ ಇಟ್ಟು ಚುನಾವಣಾ ಪ್ರಚಾರಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ರಣಕಹಳೆ ಊದಿರುವ ಲಕ್ಷ್ಮಿ ಹೆಬ್ಬಾಳ್ಕರ್, ಹಿಂಡಲಗಾದ ಮಂದಿರದಲ್ಲಿ ಗಣಪತಿ ಪೂಜೆ ನೆರವೇರಿಸಿ ಪುತ್ರ, ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ಗೆ ತಿಲಕವಿಟ್ಟು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.
ಬೃಹತ್ ಬೈಕ್ ರ್ಯಾಲಿ ಮೂಲಕ ಕ್ಷೇತ್ರ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಇದಕ್ಕೂ ಮೊದಲು ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆಯನ್ನು ಮಾಡಲಾಗಿದೆ. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಹಸ್ರಾರು ಮುಖಂಡರು ಹಾಗೂ ಕಾರ್ಯಕರ್ತರು ಜತೆಗಿದ್ದರು.
ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಮೃಣಾಲ್ ಹೆಬ್ಬಾಳ್ಕರ್, ನಮ್ಮ ಕುಟುಂಬದ ಸಂಪ್ರದಾಯದಂತೆ ಯಾವುದೇ ಕೆಲಸ ಮಾಡುವ ಮುನ್ನ ಗಣೇಶನಿಗೆ ಪೂಜೆ ಸಲ್ಲಿಸುತ್ತೇವೆ. ಅದೇ ರೀತಿ ಪೂಜೆ ಮಾಡಿ, ಎಲ್ಲ ಗುರುಹಿರಿಯರ ಆಶೀರ್ವಾದದೊಂದಿಗೆ ಇಂದು ರ್ಯಾಲಿಯನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಈ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ವಿರೋಧ ಪಕ್ಷದವರು ಏನು ಮಾಡುತ್ತಿದ್ದಾರೆ ಎನ್ನುವ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಕೆಲಸ ನಾವು ಮಾಡುತ್ತೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದಕ್ಕೆ ಹೋಗುತ್ತೇವೆ ಎಂದು ಹೇಳಿದರು.
ಸತೀಶ್ ಜಾರಕಿಹೊಳಿ ಬೆಳಗಾವಿ ಕ್ಷೇತ್ರದ ಉಸ್ತುವಾರಿ, ನಾನು ಚಿಕ್ಕೋಡಿ ಕ್ಷೇತ್ರದ ಉಸ್ತುವಾರಿ. ಇಬ್ಬರೂ ಪರಸ್ಪರ ಸಮನ್ವಯದಿಂದ ಕೆಲಸ ಮಾಡುತ್ತೇವೆ. ಚಿಕ್ಕೋಡಿಯಲ್ಲಿ ಅವಶ್ಯಕತೆ ಇದ್ದಾಗ ನಾನು ಅಲ್ಲಿಗೆ ಹೋಗುತ್ತೇನೆ, ಅವರ ಅವಶ್ಯಕತೆ ಇದ್ದಾಗ ಅವರು ಇಲ್ಲಿಗೆ ಬರುತ್ತಾರೆ. ಒಟ್ಟಾಗಿ ಉತ್ತಮವಾಗಿ ಕೆಲಸ ಮಾಡಿ, ಬೆಳಗಾವಿ, ಚಿಕ್ಕೋಡಿ ಮತ್ತು ಕೆನರಾ ಕ್ಷೇತ್ರದಲ್ಲಿ ಗೆದ್ದು ಬರುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ನಂತರ ಅಂಬೇಡ್ಕರ್ ಗಾರ್ಡನ್ ಗೆ ತೆರಳಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಅಲ್ಲಿಂದ ಚನ್ನಮ್ಮ ವೃತ್ತದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿಗೆ, ರಾಯಣ್ಣ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ, ಬೋಗಾರ್ ವೇಸ್ನಲ್ಲಿ ಸಂಭಾಜಿ ಮಹಾರಾಜರ ಪುತ್ಥಳಿಗೆ, ಶಿವಾಜಿ ಗಾರ್ಡನ್ನಲ್ಲಿ ಛತ್ರಪತಿ ಶಿವಾಜಿ ಪುತ್ಥಳಿಗೆ, ಬಸವೇಶ್ವರ ವೃತ್ತದಲ್ಲಿ ವಿಶ್ವಗುರು ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಜಹಂಸಗಡಕ್ಕೆ ತೆರಳಿ ಚತ್ರಪತಿ ಶಿವಾಜಿ ಮಹಾರಾಜರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಯುವರಾಜ ಕದಂ, ಸುರೇಶ ಇಟಗಿ, ಅಡಿವೇಶ ಇಟಗಿ ಸೇರಿದಂತೆ ಜಿಲ್ಲೆಯ ಹಲವಾರು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.