ಮೈಸೂರು: ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ನ ಧಾರವಾಡ ಪೀಠ ವಜಾಗೊಳಿಸಿದೆ. ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸೋದಾಗಿ ಕೂಡ ಹೇಳಿದ್ದರು. ಆದರೆ ಈಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಹೌದು, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸದಿರಲು ನಿರ್ಧೃಇಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.
ಸ್ನೇಹಮಯಿ ಕೃಷ್ಣ ಪೋಸ್ಟ್ ನಲ್ಲಿ ಏನಿದೆ..?
“ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ ನನ್ನ ಕೆಲವು ಆತ್ಮೀಯ ವಕೀಲರೊಂದಿಗೆ ಹಿತೈಷಿಗಳೊಂದಿಗೆ ಚರ್ಚೆ ನಡೆಸಿ ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ.
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಮತ್ತಷ್ಟು ಕಾಲ ವಿಳಂಬ ಮಾಡುವ ಬದಲು, ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸಹ ನನ್ನ ಬಳಿ ಇರುವ ಮತ್ತು ಲಭ್ಯವಾಗುವ ಸಾಕ್ಷ್ಯಾಧಾರಗಳನ್ನು ಆಧರಿಸಿ ಮಾನ್ಯ ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪದಿಂದ ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದ್ದರಿಂದ ವಕೀಲರ ಪರೋಕ್ಷ ಸಹಕಾರ ಪಡೆದುಕೊಂಡು, ಅವಶ್ಯಕತೆ ಬಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು ಖುದ್ದಾಗಿ ನಾನೇ (party in person) ಮಾನ್ಯ ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿ ವಾದ ಮಂಡನೆ ಮಾಡಿ, ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ. ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನಿರ್ಧರಿಸಿದ್ದೇನೆ” ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾರೆ.