ಬೆಂಗಳೂರು: ಚಾಮರಾಜಪೇಟೆಯ ಶಾಸಕ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ, ಪಕ್ಷ ಅಧಿಕಾರಕ್ಕೆ ಬಂದರೆ ಕೆಲವೊಂದು ನೀತಿಗಳನ್ನು ಜಾರಿಗೊಳಿಸುವುದಾಗಿ ನೀಡಿರುವ ಭರವಸೆ ಪ್ರಜಾಪ್ರತಿನಿಧಿ ಕಾಯಿದೆಯಡಿ ಮತದಾರರನ್ನು ಭ್ರಷ್ಟಗೊಳಿಸಿದಂತಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಜಮೀರ್ ಆಹ್ಮದ್ ಖಾನ್ ಆಯ್ಕೆ ಪ್ರಶ್ನಿಸಿ ಅದೇ ಕ್ಷೇತ್ರದ ಮತದಾರ ಶಶಾಂಕ್ ಜೆ. ಶ್ರೀಧರ್ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ವಾದ -ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ”ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳು ಮತ್ತು ಉಚಿತ ಉಡುಗೊರೆಗಳು ಸಮಾಜದ ಒಂದು ವರ್ಗವನ್ನು ಓಲೈಸಿದಂತಾಗುತ್ತದೆಯೇ ಎಂಬ ಬಗ್ಗೆ ಚರ್ಚೆ ನಡೆಯಬೇಕಿದೆ ಮತ್ತು ಅಂತಹ ಭರವಸೆ ಈಡೇರುವ ಸಾಧ್ಯತೆಗಳ ಬಗ್ಗೆ ಮತದಾರರೇ ಜಾಗೃತರಾಗಬೇಕು ಮತ್ತು ನಿರ್ದಿಷ್ಟ ಪಕ್ಷಕ್ಕೆ ಮತ ಹಾಕಬೇಕೇ ಬೇಡವೇ ಎಂಬ ಬಗ್ಗೆ ಅವರೇ ನಿರ್ಧರಿಸುತ್ತಾರೆ. ಇದು ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123ರ ಅನ್ವಯ ಮತದಾರರನ್ನು ಭ್ರಷ್ಟರನ್ನಾಗಿ ಮಾಡಿದಂತಾಗುವುದಿಲ್ಲ” ಎಂದು ಹೇಳಿದೆ.
Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ.! 10th ಪಾಸಾಗಿದ್ರೆ ಸಾಕು – ಇಂದೇ ಅರ್ಜಿ ಸಲ್ಲಿಸಿ
ನ್ಯಾಯಾಲಯ 2013ರಲ್ಲಿ ಸುಪ್ರೀಂಕೋರ್ಟ್ನ ‘ಎಸ್. ಸುಬ್ರಮಣ್ಯಂ ಬಾಲಾಜಿ ವರ್ಸಸ್ ಗವರ್ನಮೆಂಟ್ ಆಫ್ ತಮಿಳುನಾಡು’ ಪ್ರಕರಣದ ತೀರ್ಪು ಉಲ್ಲೇಖಿಸಿ ”ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳು ಸಾಮಾಜಿಕ ಕಲ್ಯಾಣದ ನೀತಿಗಳಾಗಿವೆ. ಅವು ಆರ್ಥಿಕವಾಗಿ ಕಾರ್ಯಸಾಧ್ಯವೇ, ಇಲ್ಲವೇ ಎಂಬುದು ಬೇರೆ ವಿಚಾರ. ಆ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಸರಕಾರದ ಖಜಾನೆ ದಿವಾಳಿಯಾಗುತ್ತದೆ ಎಂಬುದನ್ನು ಪ್ರತಿಪಕ್ಷಗಳು ಸಾಬೀತುಪಡಿಸಬೇಕು. ಆ ಯೋಜನೆ ಅಥವಾ ನೀತಿಗಳನ್ನು ತಪ್ಪು ಎಂದು ವ್ಯಾಖ್ಯಾನಿಸಬಹುದು. ಆದರೆ, ಅವು ಭ್ರಷ್ಟಾಚಾರಕ್ಕೆ ಕಾರಣವಾಗುತ್ತವೆ ಎಂದು ಹೇಳಲಾಗದು,” ಎಂದು ಆದೇಶಿಸಿದೆ.