ನವದೆಹಲಿ: ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿರುವ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದ 8 ಗಂಟೆಯೊಳಗೆ ಪೂಜೆ (Puja) ಆರಂಭವಾಗಿದೆ. ಜ್ಞಾನವಾಪಿ ಆವರಣದಲ್ಲಿ ಮಧ್ಯರಾತ್ರಿಯಲ್ಲಿ ಧಾರ್ಮಿಕ ಸಮಾರಂಭಗಳನ್ನು ನಡೆಸಲಾಯಿತು.
ನೆಲಮಾಳಿಗೆಯಲ್ಲಿರುವ ವಿಗ್ರಹಕ್ಕೆ ಬುಧವಾರ ರಾತ್ರಿ 11 ಗಂಟೆಗೆ ಪೂಜೆ ನಡೆದಿದೆ. ಪೂಜೆಯ ಬಳಿಕ ಮಂಗಳಾರತಿಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿತ್ತು. ಈ ಮೂಲಕ ಜ್ಞಾನವಾಪಿಯಲ್ಲಿ 31 ವರ್ಷಗಳ ಬಳಿಕ ಪೂಜೆ ನಡೆಯಿತು. ಪೂಜೆ ವೇಳೆ ಮಸೀದಿಯ ಆವರಣದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು.
ಪುರಾತತ್ವ ಇಲಾಖೆ ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಮಸೀದಿ (Varanasi Gyanvapi Mosque) ನಿರ್ಮಾಣ ಆಗಿರುವುದು ಮಂದಿರದ ಮೇಲೆ ಎಂಬ ಸತ್ಯ ಬಯಲಾದ ಬೆನ್ನಲ್ಲೇ ಹಿಂದೂಗಳಿಗೆ ಈಗ ಪೂಜಾಧಿಕಾರ ದಕ್ಕಿದೆ. ಈ ಪ್ರಾರ್ಥನಾ ಮಂದಿರದಲ್ಲಿ ಸೀಲ್ ಮಾಡಿರುವ ಬೇಸ್ಮೆಂಟ್ನಲ್ಲಿ ಇರುವ ಹಿಂದೂ ವಿಗ್ರಹಗಳಿಗೆ ಪೂಜೆ ಮಾಡಲು ವಾರಣಾಸಿ ಕೋರ್ಟ್ (Varanasi Court) ಅನುಮತಿ ನೀಡಿತ್ತು.