ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ದೊರೆಯುವ ಶೈಕ್ಷಣಿಕ ಸಹಾಯಧನ ಕಡಿತ ಮಾಡಿರುವ ಆದೇಶವನ್ನು ವಾಪಸ್ ಪಡೆದು ಹೈಕೋರ್ಟ್ ಆದೇಶದಂತೆ ಬಾಕಿ ಇರುವ ಶೈಕ್ಷಣಿಕ ಧನ ಸಹಾಯವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ ಅತ್ಯಂತ ಸಂಕಷ್ಠದಲ್ಲಿ ಜೀವನ ನಡೆಸುತ್ತಿರುವ ಕಟ್ಟಡ ಕಾರ್ಮಿಕರು ತನ್ನ ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಂಡಳಿಯಿಂದ ದೊರೆಯುವ ವಿದ್ಯಾರ್ಥಿ ವೇತನದಿಂದ ಪ್ರಯೋಜನವಾಗುತ್ತಿತ್ತು. ಕಳೆದ ವರ್ಷ ಪೂರ್ವನ್ವಯವಾಗುವಂತೆ ವಿದ್ಯಾರ್ಥಿವೇತನವನ್ನು ಭಾರೀ ಪ್ರಮಾಣದಲ್ಲಿ ಕಡಿತ ಮಾಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ವಾಪಸು ಪಡೆದು, ಹಿಂದಿನಂತೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.