ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆ 16ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ದಾಟಿದೆ. ಇನ್ನೂ 2025-26ನೇ ಸಾಲಿನ ಬಜೆಟ್ನಲ್ಲಿ ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಕೆಗೆ ಕೃಷಿ ಇಲಾಖೆಯಿಂದ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಕೃಷಿ ಕ್ಷೇತ್ರಕ್ಕೆ ಹೊಸ ಘೋಷಣೆಗಳೇನು?
* ರೈತ ಸಮೃದ್ಧಿ ಯೋಜನೆಯಡಿ 10 ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳ ಅಭಿವೃದ್ಧಿ ಮಾಡಲಾಗುವುದು.
* ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ ಕಲ್ಪಿಸುವುದು.
* ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ. ಒದಗಿಸಲಾಗುವುದು.
* ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ ಮಾಡಲಾಗುವುದು.
* ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ ಗುರಿ ಹೊಂದಲಾಗಿದೆ.
* ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪಿಸಲಾಗುವುದು.
* ಕೃಷಿ ಹವಾಮಾನ ವಲಯಗಳ ವರ್ಗೀಕರಣವನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ ಮಾಡಲಾಗುವುದು.
* ರೈತರ ಜೀವನೋಪಾಯ ಸುಧಾರಣೆಗೆ ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಜಾರಿ.
* ಕೃಷಿ ಇಲಾಖೆಯ 58 ಪ್ರಯೋಗಾಲಯಗಳ ಬಲವರ್ಧನೆ.
* 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್ಗಳ ಸ್ಥಾಪನೆ ಮಾಡುವುದರ ಜೊತೆಗೆ ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
* ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ಮೀಸಲಿಡಲಾಗುವುದು
* ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್ ಸೌಲಭ್ಯ ಕಲ್ಪಿಸಲಾಗುವುದು
* ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು
* ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಕುರಿತು ಕಾರ್ಯಸಾಧ್ಯತ ವರದಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದರು.