ಬೆಂಗಳೂರು:- ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತ ಕೊಳವೆ ಬಾವಿ ತಡೆಗಟ್ಟಲು ವಿಶೇಷ ತಂಡ ರಚಿಸಲಾಗಿದೆ ಎಂದು ಸಚಿವ ಬೋಸರಾಜು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿಗಳನ್ನ ತಡೆಗಟ್ಟುವ ನಿಟ್ಟಿನಲ್ಲಿ ಅಂತರ್ಜಲ ನಿರ್ದೇಶನಾಲಯದಿಂದ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಲಾಗಿದೆ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
ರಾಜ್ಯದಲ್ಲಿ, ಅದರಲ್ಲೂ ಪ್ರಮುಖವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅನಧಿಕೃತ ಕೊಳವೆಬಾವಿಗಳನ್ನು ಕೊರೆಯುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳುವುದು ಆದ್ಯತೆಯ ವಿಷಯವಾಗಿದೆ. ಅನಧಿಕೃತ ಕೊಳವೆ ಬಾವಿಗಳಿಂದ ಅಂತರ್ಜಲ ಮಟ್ಟ ಕಡಿಮೆ ಆಗುತ್ತದೆ. ಅಂತರ್ಜಲ ಶೋಷಣೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಕೊಳವೆ ಬಾವಿಗಳನ್ನು ಕೊರೆಸುವುದಕ್ಕೆ ಅನುಮತಿ ಪಡೆದುಕೊಳ್ಳುವುದು ಅಗತ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಸರಿಯಾಗಿ ಪಾಲಿಸಲಾಗುತ್ತಿಲ್ಲ. ಅನುಮತಿ ಪಡೆದುಕೊಳ್ಳದೇ ಕೊಳವೆ ಬಾವಿಗಳನ್ನ ಕೊರೆಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕ್ಕಾಗಿ ಅಂತರ್ಜಲ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಸೂಚನೆಯ ಅನ್ವಯ ವಿಶೇಷ ತಂಡವನ್ನು ರಚಿಸಲಾಗಿದೆ ಎಂದಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಪ್ರದೇಶದಲ್ಲಿ ನಿಯಮಿತವಾಗಿ ತಪಾಸಣೆ ನಡೆಸುವಂತೆ ವಿಶೇಷ ತಂಡಕ್ಕೆ ಸೂಚಿಸಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಧಾನ ಮುಖ್ಯ ಇಂಜಿನಿಯರ್ ತಮ್ಮ ಅಧೀನದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ತಿಳಿಸಲಾಗಿದೆ. ಅಲ್ಲದೇ, ರಾಜ್ಯಾದ್ಯಂತ ಅನಧಿಕೃತ ಕೊಳವೆ ಬಾವಿಗಳನ್ನು ಕೊರೆಸುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಅಂತರ್ಜಲ ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)