ಬೆಂಗಳೂರು:- ರಾಜ್ಯ ಸರ್ಕಾರ ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವ ಕುರಿತ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ವಿಶ್ವವಿದ್ಯಾಲಯ ಮುಚ್ಚುವುದರಿಂದ ಎಸ್ಸಿ-ಎಸ್ಟಿ, ಒಬಿಸಿ, ಮಹಿಳೆಯರಿಗೆ ಅನ್ಯಾಯವಾಗಲಿದೆ. ವಿಶ್ವವಿದ್ಯಾಲಯಗಳ ಪರಿಕಲ್ಪನೆ ಬದಲಾವಣೆಯಾಗಿದೆ. ರಾಜ್ಯದಲ್ಲಿ 50, 60ನೇ ದಶಕದಲ್ಲಿ ವಿಶ್ವವಿದ್ಯಾಲಯಗಳು ಸ್ಥಾಪನೆಯಾಗಿದ್ದವು. ಆವತ್ತಿನ ಕಾಲೇಜು ಸಂಖ್ಯೆ, ವಿದ್ಯಾರ್ಥಿಗಳ ಸಂಖ್ಯೆಗೂ ಇಂದಿಗೂ ಬಹಳ ವ್ಯತ್ಯಾಸ ಇದೆ. ನಾವು ಹಿಂದುಳಿದ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಎಸ್ಸಿ-ಎಸ್ಟಿ, ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ವಿಶ್ವವಿದ್ಯಾಲಯ ಮಾಡಿದ್ದೇವೆ. ಈ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಬೇಕಿಲ್ಲ. ಆದರೂ ಕೂಡ ಒಂದು ನಯಾ ಪೈಸೆಯನ್ನು ಕಾಂಗ್ರೆಸ್ ಸರ್ಕಾರ ನೀಡಿಲ್ಲ.
ಡಿಜಿಟಲ್ ಶಿಕ್ಷಣ, ದೂರ ಶಿಕ್ಷಣ ಎಲ್ಲವನ್ನೂ ಸಮರ್ಪಕವಾಗಿ ಮಾಡುತ್ತಿದ್ದಾರೆ. ಜಿಲ್ಲೆಯ ಎಸ್ಸಿ-ಎಸ್ಟಿ, ಒಬಿಸಿ ವಿದ್ಯಾರ್ಥಿಗಳು ಹಾಗೂ ಹೆಣ್ಣು ಮಕ್ಕಳಿಗೆ ದೊಡ್ಡ ಪ್ರಮಾಣದಲ್ಲಿ ಅನುಕೂಲವಾಗಿದೆ. ಇದನ್ನು ಸ್ಥಗಿತಗೊಳಿಸಿದರೆ ಎಸ್ಸಿ-ಎಸ್ಟಿ, ಒಬಿಸಿ ಹಾಗೂ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಬಹಳ ದೊಡ್ಡ ಅನ್ಯಾಯ ಮಾಡಿದಂತಾಗುತ್ತದೆ. ಈಗಾಗಲೇ ಎಲ್ಲ ಜಿಲ್ಲೆಯ ಜನರು, ವಿದ್ಯಾರ್ಥಿಗಳು, ಪೋಷಕರು, ಬುದ್ಧಿ ಜೀವಿಗಳು ವಿರೋಧ ಮಾಡುತ್ತಿದ್ದಾರೆ. ಇವುಗಳನ್ನು ಅಲ್ಪ ದುಡ್ಡಿನಲ್ಲಿಯೇ ಬಲವರ್ಧನೆ ಮಾಡದೇ ಅವುಗಳನ್ನು ಮುಚ್ಚಿಸುವ ಕೆಲಸ ಮಾಡುತ್ತಿರುವುದು ಘೋರ ಅನ್ಯಾಯ ಎಂದು ತಿಳಿಸಿದರು.
ಈಗಾಗಲೇ ಇರುವ ಹಳೆಯ ವಿಶ್ವ ವಿದ್ಯಾಲಯಗಳಿಗೆ ನೂರಾರು ಕೋಟಿ ರೂ. ಖರ್ಚು ಮಾಡುತ್ತಾರೆ. ಅವುಗಳ ಸ್ಥಿತಿಗತಿ ಏನಿದೆ. ಖಾಲಿ ಹುದ್ದೆಗಳಿವೆ. ಎಷ್ಟೋ ಕೋರ್ಸ್ ಗಳಿಗೆ ವಿದ್ಯಾರ್ಥಿಗಳಿಲ್ಲ. ಅತ್ಯಂತ ಅಧೋಗತಿಗೆ ಹೋಗಿವೆ. ಭ್ರಷ್ಟಾಚಾರದ ಕೂಪಗಳಾಗಿವೆ. ಈಗಾಗಲೇ ಎರಡು ವರ್ಷದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಹೊಸ ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೋಗುತ್ತಿರುವುದು ನಿಜವಾಗಲು ಉನ್ನತ ಶಿಕ್ಷಣಕ್ಕೆ ದೊಡ್ಡ ಕೊಡಲಿ ಪೆಟ್ಟು ನೀಡಿದಂತಾಗುತ್ತದೆ, ಎನ್ಇಪಿ ವಿಚಾರದಲ್ಲಿಯೂ ರಾಜ್ಯ ಸರ್ಕಾರ ಇದೇ ರೀತಿ ಮಾಡಿತ್ತು. ಇದರ ವಿರುದ್ಧ ಬುದ್ದಿ ಜೀವಿಗಳಿಂದ ಹಿಡಿದು ಎಲ್ಲ ಜನರೂ ಹೋರಾಟ ಮಾಡಬೇಕು. ಕಾನೂನು ಸಮರ ಮಾಡಬೇಕು ಎಂದು ಹೇಳಿದರು.