ಢಾಕಾ: ಕಳೆದ ವರ್ಷ ಶೇಖ್ ಹಸೀನಾ ಅವರ ಸರಕಾರದ ಪದಚ್ಯುತಿಗೆ ಮೂಲ ಕಾರಣವಾಗಿದ್ದ ವಿದ್ಯಾರ್ಥಿ ಸಂಘಟನೆಯ ಪ್ರತಿನಿಧಿಗಳು ಇದೀಗ ಬಾಂಗ್ಲಾದಲ್ಲಿ ಹೊಸ ರಾಜಕೀಯ ಪಕ್ಷದ ಸ್ಥಾಪನೆಗೆ ಮುಂದಾಗಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಬಾಂಗ್ಲಾದೇಶದಲ್ಲಿ ಮುಂದಿನ ವರ್ಷದ ಮಧ್ಯಭಾಗದಲ್ಲಿ ನಡೆಯುವುದೆಂದು ನಿರೀಕ್ಷಿಸಲಾಗಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷವು (ಬಿಎನ್ಪಿ) ಹಾಲಿ ಮಧ್ಯಂತರ ಸರಕಾರದ ಬೆಂಬಲದಿಂದ ಅಧಿಕಾರ ಪಡೆಯುವ ಉತ್ಸಾಹದಲ್ಲಿದೆ. ಇದಕ್ಕೆ ಪೂರಕವಾಗಿ ಹಸೀನಾ ಸರಕಾರದ ಪದಚ್ಯುತಿಗೆ ಕಾರಣವಾಗಿದ್ದ ವಿದ್ಯಾರ್ಥಿ ಸಂಘಟನೆಯ ಬೆಂಬಲ ಪಡೆಯಲು ಬಿಎನ್ಪಿ ನಿರ್ಧರಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಯಾಗಿದೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ಪ್ರಮುಖರು ಕೂಡಾ ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದು ಬಿಎನ್ಪಿಯ ವಿದ್ಯಾರ್ಥಿ ಸಂಘಟನೆಯ ಕೆಂಗಣ್ಣಿಗೆ ಕಾರಣವಾಗಿತ್ತು. ಇದರಿಂದ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ವಿವಿ ಕ್ಯಾಂಪಸ್ನಲ್ಲಿ ನಡೆದ ಹಿಂಸಾಚಾರಕ್ಕೆ ವಿದ್ಯಾರ್ಥಿಗಳ ಎರಡು ಗುಂಪಿನ ನಡುವಿನ ವೈಮನಸ್ಯ ಹಾಗೂ ರಾಜಕೀಯ ಮೇಲಾಟ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಬಾಂಗ್ಲಾದೇಶದ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಗುಂಪಿನ ನಡುವೆ ಭುಗಿಲೆದ್ದ ಘರ್ಷಣೆಯಲ್ಲಿ ಕನಿಷ್ಠ 150 ವಿದ್ಯಾರ್ಥಿಗಳು ಗಾಯಗೊಂಡಿದ್ದು ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ವರದಿಯಾಗಿದೆ.