ಬೆಂಗಳೂರು:- ನಾಳೆಯಿಂದ ನಡೆಯಬೇಕಿದ್ದ KPSC ಪರೀಕ್ಷೆ ದಿಢೀರ್ ಮುಂದೂಡಿಕೆ ಮಾಡಲಾಗಿದೆ.
ರಾಜ್ಯ ಸರ್ಕಾರವು ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿ ಅನ್ವಯವಾಗುವಂತೆ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ನಾಳೆಯಿಂದ ನಡೆಯಬೇಕಿದ್ದ ಕೆಪಿಎಸ್ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿರುವುದಾಗಿ ತಿಳಿಸಿದೆ.
ಗೃಹ ಸಚಿವರಾಗಲು ಸಮರ್ಥರಲ್ಲ: ಕುಮಾರಸ್ವಾಮಿ ಹೇಳಿಕೆಗೆ ಪರಮೇಶ್ವರ್ ಟಾಂಗ್!
ಸರ್ಕಾರದ ಹೊಸ ಆದೇಶದಿಂದ ಎಲ್ಲ ಹುದ್ದೆಗಳಿಗೂ ವಯೋಮಿತಿಯ ಸಡಿಲಿಕೆಯು ಅನ್ವಯವಾಗಲಿದೆ. ಹಾಗಾಗಿ ನಾಳೆ ನಡೆಯಬೇಕಿದ್ದ ಕಡ್ಡಾಯ ಕನ್ನಡ ಹಾಗೂ ಭಾನುವಾರ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೊನೇ ಕ್ಷಣದಲ್ಲಿ ಮುಂದೂಡಿದೆ. ಕೆಪಿಎಸ್ಸಿಯ ಈ ದಿಢೀರ್ ನಿರ್ಧಾರದಿಂದ ನಾಳೆ ಪರೀಕ್ಷೆ ಬರೆಯಲು ಸಜ್ಜಾಗಿದ್ದ ಅಭ್ಯರ್ಥಿಗಳಿಗೆ ಶಾಕ್ ನೀಡಿದಂತಾಗಿದೆ.
ನಾಳೆ ನಡೆಯಬೇಕಿದ್ದ ಕೆಪಿಎಸ್ಸಿಯ ವಿವಿಧ ಗ್ರೂಪ್-ಬಿ ಹುದ್ದೆಗಳ ಪರೀಕ್ಷೆ ಮುಂದೂಡಲಾಗಿದೆ. ಸೆಪ್ಟೆಂಬರ್ 14 ಮತ್ತು 15ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳ ಹಂಚಿಕೆ ಕೂಡ ಮಾಡಲಾಗಿತ್ತು.
ಆದರೆ, ಕರ್ನಾಟಕ ಸರ್ಕಾರ ಇತ್ತೀಚೆಗೆ ತನ್ನ ನಡಾವಳಿಗಳಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಸಲಕ್ಕೆ ಅನ್ವಯಿಸುವಂತೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿ ಆದೇಶ ಹೊರಡಿಸಿದೆ.
ಈ ಕಾರಣದಿಂದ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಎಲ್ಲ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಲಾಗುತ್ತಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಾಗಿದೆ. ಹಾಗಾಗಿ ಪರೀಕ್ಷೆಯನ್ನು ಸದ್ಯಕ್ಕೆ ಮುಂದೂಡಲಾಗಿದ್ದು, ಮುಂದಿನ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ.