ಬೆಂಗಳೂರು:- ರಾಜ್ಯ ಸರ್ಕಾರ ತಪ್ಪು ಮಾಹಿತಿ ನೀಡಿ ಜನರ ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ರಾಜಕೀಯ ಸ್ಟಂಟ್ ಮಾಡುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಳೆ ಚಾಳಿ ಬಿಟ್ಟಿಲ್ಲ. ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೋಪ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ರೈತ ವಿರೋಧಿ ಸರ್ಕಾರ ರಾಜ್ಯದಲ್ಲಿದೆ. ಒಂಬತ್ತು ತಿಂಗಳಿನಿಂದ ಒಂದು ರೂ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ. 14ನೇ ಹಣಕಾಸಿಗಿಂತ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಹಣ ಕಡಿಮೆ ಆಗಿದೆ ಎಂದು ಹೇಳಿದ್ದಾರೆ. 15ನೇ ಹಣಕಾಸು ಆಯೋಗದ ಸಮಿತಿ ಬಂದಾಗ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇತ್ತು. ಆಗ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಆಯೋಗಕ್ಕೆ ಸರಿಯಾಗಿ ಮಾಹಿತಿ ನೀಡಿಲ್ಲ. ಹೀಗಾಗಿ 15ನೇ ಹಣಕಾಸು ಆಯೋಗದಲ್ಲಿ 4.7% ನಿಂದ 3.6% ಗೆ ಕಡಿಮೆಯಾಗಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಆರೋಪಿಸಿದರು.
ಯುಪಿಎ ಅವಧಿಯಲ್ಲಿ 2004-14 ರವರೆಗೆ ತೆರಿಗೆ ಮೂಲಕ 81,795 ಕೋಟಿ ಬಂದಿತ್ತು. ಎನ್ಡಿಎ ಅವಧಿಯಲ್ಲಿ 2,82,791 ಕೋಟಿ ರೂ. ಹಣ ಬಂದಿದೆ. ಅಭಿವೃದ್ಧಿ ಅನುದಾನ ಯುಪಿಎ ಅವಧಿಯಲ್ಲಿ 60,779 ಕೋಟಿ ರೂ. ಬಂದಿದೆ. ಮೋದಿ ಅವಧಿಯಲ್ಲಿ 2,08,882 ಕೋಟಿ ಬಿಡುಗಡೆಯಾಗಿದೆ. ಇದರ ಅವಧಿ ಇನ್ನೂ ಎರಡು ವರ್ಷ ಇದೆ. 2026 ರವರೆಗೆ 2.5 ಲಕ್ಷ ಕೋಟಿ ಮೀರಿ ತೆರಿಗೆ ಹಂಚಿಕೆ ಬರಲಿದೆ. ಇದು ಕಾಂಗ್ರೆಸ್ ನೇತೃತ್ವದ ಯುಪಿಎ ಇದ್ದಾಗ 14 ನೇ ಹಣಕಾಸಿನ ಶಿಫಾರಸಿಗಿಂತ 1,51,309 ಕೋಟಿ ರೂ.ಗಳಿಗಿಂತ ಅಧಿಕವಾಗಿದೆ ಎಂದು ಹೇಳಿದರು.
ಇದಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಬೇರೆ ಬೇರೆ ರೂಪದಲ್ಲಿ ಅನುದಾನ ಬರುತ್ತದೆ. ಸ್ವಾತಂತ್ರ್ಯ ಬಂದಾಗಿನಿಂದ 2014 ರವರೆಗೆ ರಾಜ್ಯದಲ್ಲಿ ಕೇವಲ 6 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾಗಿತ್ತು. ಆದರೆ, ಮೋದಿ ಅವಧಿಯಲ್ಲಿ 2014-24ರವರೆಗೆ 13,500 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರಾಜ್ಯದ 60 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಿದೆ. ರೈಲ್ವೆ ಯೋಜನೆಗಳಿಗೆ ಯುಪಿಎ ಅವಧಿಯಲ್ಲಿ 835 ಕೋಟಿ ಬಂದಿದ್ದು. ಎನ್ಡಿಎ ಅವಧಿಯಲ್ಲಿ 11,000 ಕೋಟಿ ರೂ. ಬಂದಿದೆ. 2023-24ನೇ ಬಜೆಟ್ನಲ್ಲಿ ರಾಜ್ಯಕ್ಕೆ ರೈಲ್ವೆಗೆ 7,524 ಕೋಟಿ ರೂ. ಹಂಚಿಕೆಯಾಗಿದೆ. ರೈಲ್ವೆ ವಿದ್ಯುದೀಕರಣಕ್ಕೆ 1947 ರಿಂದ 2014 ರವರೆಗೆ ರಾಜ್ಯದಲ್ಲಿ ಕೇವಲ 16 ಕಿ.ಮೀ ಅಭಿವೃದ್ಧಿ ಆಗಿದ್ದು, ಎನ್ಡಿಎ ಅವಧಿಯಲ್ಲಿ 3265 ಕಿ.ಮೀ ರಾಜ್ಯದಲ್ಲಿ ರೈಲ್ವೆ ವಿದ್ಯುದೀಕರಣವಾಗಿದೆ. ಕೊರೊನಾ ಸಂದರ್ಭದಲ್ಲಿ ರಾಜ್ಯದಲ್ಲಿ 10 ಕೋಟಿ ಕೊರೊನಾ ಉಚಿತ ಲಸಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿಯನ್ನು ಸಂಪೂರ್ಣ ಉಚಿತವಾಗಿ ನೀಡುತ್ತಿದ್ದು, ಅದೆಲ್ಲವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳದೆ ಮರೆಮಾಚುತ್ತಿದ್ದಾರೆ ಎಂದು ಹರಿಹಾಯ್ದರು.