ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹನ್ನೊಂದನೇ ದಿನದ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಹೇಳಿದರು.
ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಹತ್ತು ದಿನಗಳ ಕಾಲ ವಿಜೃಂಭಣೆಯಿಂದ ಗಣೇಶೋತ್ಸವ ಆಚರಣೆ ಮಾಡಿದ್ದು, ಇಂದು ವಿಸರ್ಜನೆಗೂ ಕೂಡ ಶಾಂತಿ ಸೌಹಾರ್ದತೆಯಿಂದ ಸಾರ್ವಜನಿಕರು ಸಹಕಾರ ಮಾಡಬೇಕು ಎಂದರು.
ನೂರಕ್ಕೂ ಹೆಚ್ಚು ಗಣಪತಿ ವಿಸರ್ಜನೆ ಮಾಡಲಾಗುತ್ತಿದ್ದು, ಮೂರು ಸಾವಿರಕ್ಕೂ ಹೆಚ್ಚು ಪೊಲೀಸ್, ಕೆ.ಎಸ್.ಆರ್.ಪಿ, ರ್ಯಾಪಿಡ್ ಆ್ಯಂಟಿಜನ್ ಪೋರ್ಸ್ ಸೇರಿದಂತೆ ವಿವಿಧ ಅಧಿಕಾರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಲ್ಲದೇ ಬಹುತೇಕ ಕಡೆಯಲ್ಲಿ ಸಿಸಿಟಿವಿ ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಇನ್ನೂ ಪಾಲಿಕೆಗೆ ಸೂಚನೆ ನೀಡಿರುವಂತೆ ಕುಡಿಯುವ ನೀರಿನ ವ್ಯವಸ್ಥೆ, ಸುರಕ್ಷತಾ ತಾಣ, ಆಂಬ್ಯುಲೆನ್ಸ್ ವ್ಯವಸ್ಥೆ ಜೊತೆಗೆ ಎಲ್ಲ ರೀತಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 2.5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕಮೀಷನರ್ ಮಾಹಿತಿ ನೀಡಿದರು.