ಕೊಡಗು: ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾಗಮಂಡಲ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಜಿಲ್ಲೆಯ ಅಬ್ಬಿ, ಇರ್ಪು, ಮಲ್ಲಳ್ಳಿ, ಚೇಲಾವರ ಸೇರಿದಂತೆ ಹಲವು ಜಲಪಾತಗಳು ಬೋರ್ಗರೆಯುತ್ತಿವೆ. ಜಿಲ್ಲೆಯ ನದಿ, ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕಾವೇರಿ ನದಿ ಪಾತ್ರದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬರೆ ಕುಸಿತ, ಮನೆಗಳಿಗೆ ಹಾನಿ ಉಂಟಾಗಿದ್ದು, ರಸ್ತೆಯಲ್ಲಿ ಅಲ್ಲಲ್ಲಿ ನೀರು ನಿಂತು ಓಡಾಟಕ್ಕೆ ಅಡೆತಡೆ ಉಂಟಾಗಿದೆ. ಮನೆ ಹಾನಿಯಾದ ಕೆಲವು ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಪಡಿತರ ವಿತರಣಾ ಕಾರ್ಯವು ನಡೆದಿದೆ.
ಕಾವೇರಿ ನದಿ ಪಾತ್ರದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಕರಡಿಗೋಡು, ಸಿದ್ದಾಪುರ, ನೆಲ್ಯಹುದಿಕೇರಿ ಮತ್ತಿತರ ಭಾಗದ ನದಿ ಭಾಗದಲ್ಲಿ ವಾಸಿಸುವ ಕುಟುಂಬಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತ ಕ್ರಮವಹಿಸಿದೆ. ಜಿಲ್ಲೆಯ ಆಯಾಯ ತಾಲ್ಲೂಕಿನ ತಹಶೀಲ್ದಾರರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.