ಬೆಂಗಳೂರು: ಓಪಿಎಸ್ ಜಾರಿ ವಿಚಾರವಾಗಿ ಡಿಸಿಎಂ ಭರವಸೆ ನೀಡಿದಾಗ ನೌಕರರು “ಡಿಕೆ, ಡಿಕೆ” ಎಂದು ಘೋಷಣೆ ಕೂಗಿದರು. ಆಗ ಸಭಿಕರಿಗೆ ಸುಮ್ಮನಿರಲು ಹೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ನಾನು ಮುಂದಿನ ಬಾರಿ ಚುನಾವಣೆಗೆ ನಿಂತಾಗ, ನನ್ನ ನಾಯಕತ್ವದಲ್ಲಿ ನಡೆದಾಗ ದಯವಿಟ್ಟು ಈ ಪದವನ್ನು ಉಪಯೋಗಿಸಿ. ನಾನು ವಿಧಾನಸೌಧದಲ್ಲಿ ಇರುವವನೇ. ನಾನು ಇನ್ನು ಎಂಟತ್ತು ವರ್ಷ ಬಿಟ್ಟು ಹೋಗುವುದಿಲ್ಲ. ನನ್ನ ಆರೋಗ್ಯ ಇನ್ನೂ ಗಟ್ಟಿಯಾಗಿದೆ. ನನ್ನ ಮೇಲೆ ನಂಬಿಕೆಯಿಡಿ” ಎಂದು ಮಾರ್ಮಿಕವಾಗಿ ಹೇಳಿದರು.
ಬಾಳೆಹಣ್ಣಿನಿಂದ ಸಿಗುವ ಬೆನಿಫಿಟ್ ಅಷ್ಟಿಷ್ಟಲ್ಲ: ನೀವು ಓದಲೇಬೇಕಾದ ಸ್ಟೋರಿ ಇದು!
ಓಪಿಎಸ್ ಅನುಷ್ಠಾನಕ್ಕೆ ಅಗತ್ಯ ಕ್ರಮ
“ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿಗೆ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಭರವಸೆ ನೀಡಿದರು.
ಬೆಂಗಳೂರು ಅರಮನೆ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಅವರು ಮಾತನಾಡುತ್ತಾ, “ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದನ್ನು ಜಾರಿಗೆ ತರಲು ಬದ್ದರಾಗಿದ್ದೇವೆ. ನೀವು ಬಿಟ್ಟರೂ ಈ ವಿಚಾರವನ್ನು ನಾವು ಬಿಡುವುದಿಲ್ಲ. ಆದರೆ ಸ್ವಲ್ಪ ತಾಳ್ಮೆಯಿರಲಿ” ಎಂದು ನೌಕರರಿಗೆ ಸಂದೇಶ ನೀಡಿದರು.
ಸರ್ಕಾರಿ ನೌಕರರ ಮಹತ್ವ
“ಸರ್ಕಾರದ ರಥ ಎಳೆಯುವವರು ಸರ್ಕಾರಿ ನೌಕರರು. ನೀವು ಇಲ್ಲದಿದ್ದರೆ ಸರ್ಕಾರದ ಚಕ್ರ ಮುಂದಕ್ಕೆ ಸಾಗುವುದಿಲ್ಲ. ನಿಮ್ಮ ಸಂಘ ರಚನಾತ್ಮಕವಾಗಿ ಕೆಲಸ ಮಾಡುತ್ತಿದೆ. ಸರ್ಕಾರಿ ಕೆಲಸ ಕೇವಲ ಹುದ್ದೆಯಲ್ಲ. ಅದೊಂದು ಜವಾಬ್ದಾರಿ. ನೀವು ಹೃದಯ ಶ್ರೀಮಂತಿಕೆಯಿಂದ ಜವಾಬ್ದಾರಿ ಸರಿಯಾಗಿ ನಿಭಾಯಿಸಬೇಕು” ಎಂದು ಅವರು ಉಲ್ಲೇಖಿಸಿದರು.
ನೌಕರರ ಕಾರ್ಯಪದ್ಧತಿಗೆ ಪ್ರಸ್ತಾವನೆ ನೀಡಿದ ಡಿಸಿಎಂ, “ನಮ್ಮ ಸಮಾಜ ಸದಾ ಸೇವೆ ಮಾಡುವವರನ್ನು ಗುರುತಿಸುತ್ತದೆ. ದಶರಥನಿಗಿಂತ ಹನುಮಂತನ ದೇವಾಲಯಗಳೇ ಹೆಚ್ಚು. ನೀವು ಕೂಡ ನಿಮಗೆ ಅವಕಾಶ ಸಿಕ್ಕಾಗ ಸಮಾಜದ ಕೆಲಸ ಮಾಡಬೇಕು. ಆತ್ಮಸಾಕ್ಷಿಗೆ ತೃಪ್ತಿಯಾಗುವಂತೆ ಕೆಲಸ ಮಾಡಬೇಕು. ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ನೀವು ನಿಮ್ಮ ಜೀವನದಲ್ಲಿ ಎಷ್ಟು ಜನರ ಬದುಕು ಬದಲಾವಣೆ ಮಾಡಲು ಪೆನ್ನು ಪೇಪರ್ ಬಳಸುತ್ತೀರಿ ಎಂಬುದು ಮುಖ್ಯ” ಎಂದು ನೌಕರರನ್ನು ಪ್ರೇರೇಪಿಸಿದರು.
ಸರ್ಕಾರದ ಪ್ರಗತಿಗೆ ನೌಕರರ ಬೆಂಬಲ ಅವಶ್ಯಕ
“ನಾವು ರಾಜ್ಯದ ನಾಲ್ಕು ಕೋಟಿ ಜನರಿಗೆ ಸಹಾಯ ಮಾಡುವ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಆಸರೆಯಾಗಲು ಪಂಚ ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಸರ್ಕಾರ ಹಂತ ಹಂತವಾಗಿ ಸಂಪನ್ಮೂಲ ಕ್ರೂಢೀಕರಣ ಆದಂತೆ ನಮ್ಮ ಯೋಜನೆಗಳ ಫಲಾನುಭವಿಗಳಿಗೆ ಹಣ ನೀಡುತ್ತೇವೆ. ನಾವು ಯಾರಿಗೂ ಗೃಹಲಕ್ಷ್ಮೀ ಹಣ ತಪ್ಪಿಸುವ ಪ್ರಮೇಯವೇ ಇಲ್ಲ” ಎಂದು ಅವರು ಭರವಸೆ ನೀಡಿದರು.
ಮುಖ್ಯಮಂತ್ರಿ ಈ ಕಾರ್ಯಕ್ರಮಕ್ಕೆ ಹಾಜರಾಗಲು ಇಚ್ಛೆಪಟ್ಟಿದ್ದರು ಆದರೆ ವೈದ್ಯರ ಸಲಹೆಯಿಂದ ಅವರು ವಿಶ್ರಾಂತಿ ತೆಗೆದುಕೊಳ್ಳಬೇಕಾಯಿತು ಎಂಬುದನ್ನು ಡಿಸಿಎಂ ತಿಳಿಸಿದರು. “ನಾವು ಜಾತಿ, ಧರ್ಮದ ತಾರತಮ್ಯಕ್ಕೆ ವಿರೋಧಿ. ಎಲ್ಲರೂ ಮಾನವ ಧರ್ಮವನ್ನು ಪಾಲಿಸಬೇಕು. ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರೆಲ್ಲರೂ ಒಂದೇ. ನಾವು ನಿಮ್ಮನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ನಿಮ್ಮ ಬೇಡಿಕೆಯನ್ನು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸೇರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.