ಬೆಂಗಳೂರು: ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಅಧಿಕೃತ ಜಾತಿಗಣತಿ ಮಾಡಿಸಿಲ್ಲ. ಹೀಗಾಗಿ ಈಗ ಬಿಡುಗಡೆ ಮಾಡುವುದು ಜಾತಿಗಣತಿಯಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭೆ ಪ್ರತಿ ವರ್ಷ ಸಮಾಜವನ್ನು ಒಗ್ಗೂಡಿಸುವ ಸಲುವಾಗಿ ಸಮ್ಮೇಳನ ನಡೆಯುತ್ತದೆ. ಈ ವರ್ಷ ದಾವಣಗೆರೆಯಲ್ಲಿ ನಡೆಸಲಾಗುತ್ತಿದೆ ಎಂದರು.
ಈ ಸಮಾವೇಶದಲ್ಲಿ ಜಾತಿಗಣತಿ ವಿರೋಧಿಸುವ ನಿರ್ಧಾರಕೈಗೊಳ್ಳಲಾಗುತ್ತದೆಯೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದುಳಿದ ವರ್ಗದ ಆಯೋಗ ಮಾಡಿರುವುದು ಜಾತಿ ಗಣತಿಯೇ ಅಲ್ಲ. ಎಲ್ಲ ಸಮುದಾಯಗಳ ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿ ಹೇಗಿದೆ ಅಂತ ಅಧ್ಯಯನ ಮಾಡಿದೆ. ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಬೇರೆ ರಾಜ್ಯಗಳ ಜಾತಿಗಣತಿಗಳ ಬಗ್ಗೆಯೂ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆ ನಡೆಯುತ್ತಿದೆ.
ಈಗಿರುವ ಹಿಂದುಳಿದ ವರ್ಗದ ಅಧ್ಯಕ್ಷರು ಈಗಾಗಲೇ ಸಿದ್ದವಾಗಿರುವ ವರದಿಯನ್ನು ಏಕೆ ಇಟ್ಟುಕೊಂಡಿದ್ದಾರೆ. ನಾವೂ ಸಾಮಾಜಿಕ ನ್ಯಾಯದ ಪರವಾಗಿದ್ದೇವೆ. ಸಾಮಾಜಿಕ ನ್ಯಾಯ ಯಾವುದೇ ಒಂದು ಪಕ್ಷದ ಸ್ವತ್ತಲ್ಲ. ಅವರಿಗೆ ಎಲ್ಲರಿಗೂ ನ್ಯಾಯ ಕೊಡಿಸಬೇಕೆಂದು ಇದ್ದರೆ ಅಧಿಕೃತ ಜಾತಿ ಗಣತಿ ಮಾಡಲಿ. ನಾವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಿಂದುಳಿದ ವರ್ಗಗಳ ಅನೇಕ ಸಮುದಾಯಗಳಿಗೆ ನ್ಯಾಯ ಕೊಡಿಸಲು ಪ್ರಯತ್ನ ಮಾಡಿದ್ದೇವೆ. ಈ ವರದಿ ವೈಜ್ಞಾನಿಕ ವಾಗಿಲ್ಲ ಎನ್ನುವ ಮಾತಿದೆ. ಈ ವರದಿ ಬರಲಿ ಏನು ಲೋಪ ಇದೆ ನೊಡೋಣ ಎಂದು ಪ್ರತಿಕ್ರಿಯಿಸಿದರು.