ಬೆಂಗಳೂರು:- ಮಾಜಿ ಸಚಿವ ಸುಧಾಕರ್ ಅವರನ್ನು ಮರಳಿ ಪಕ್ಷಕ್ಕೆ ಕರಿಸಿಕೊಳ್ಳುವ ಬಗ್ಗೆ ಚಿಕ್ಕಬಳ್ಳಾಪುರ ನಾಯಕರಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಆದರೆ ಶಾಸಕ ಪ್ರದೀಪ್ ಈಶ್ವರ್ ತಟಸ್ಥ ನಿಲುವು ಕಾಯ್ದುಕೊಂಡಿದ್ದಾರೆ.
ಇಂಥ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವಷ್ಟು ದೊಡ್ಡವನಲ್ಲ. ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ
ಯಶವಂತಪುರ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಇತರ ನಾಯಕರ ಜೊತೆ ಚರ್ಚಿಸಿರುವ ಸುಧಾಕರ್, ನಿರಂತರವಾಗಿ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ ಎನ್ನಲಾಗಿದೆ. ಮೂರು ದಿನಗಳ ಹಿಂದಷ್ಟೇ ಸೋಮಶೇಖರ್ ಜೊತೆ ಸುಧಾಕರ್ ಮಾತುಕತೆ ನಡೆಸಿದ್ದರು. ಇದಕ್ಕೆ ಹೊಸಕೋಟೆ ನಾಯಕನಿಂದ ವೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಎಂದೂ ಹೇಳಲಾಗುತ್ತಿದೆ.
ಮತ್ತೊಂದಡೆ, ಸುಧಾಕರ್ ಅವರನ್ನು ಮರಳಿ ಪಕ್ಷಕ್ಕೆ ಕರೆಸಿಕೊಳ್ಳುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಧಾಕರ್ ಅವರು ಲೋಕಸಭೆ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ಗೆ ಲಾಬಿ ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿತ್ತು. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅಷ್ಟೇನೂ ಸಕ್ರಿಯವಾಗಿ ಇರದಿದ್ದ ಸುಧಾಕರ್ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮತ್ತೆ ಸಕ್ರಿಯರಾಗಿದ್ದಾರೆ.