ಬಳ್ಳಾರಿ : ಗಣಿ ಜಿಲ್ಲೆಯ ಉಸ್ತುವಾರಿ, ಸಚಿವ ಜಮೀರ್ ಅಹ್ಮದ್ ಅವರ ಮೂಲಕ ವರ್ಷದ ನಂತರ ಅನ್ಯ ಜಿಲ್ಲೆಯವರ ಮುಡಿಗೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಸುವ ಮೂಲಕ ರಾಜ್ಯಾದ್ಯಂತ ಗಮನ ಸೆಳೆಯಲಾಗಿತ್ತು. ನೂತನ ಸಂಪುಟದಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನಿರಾಯಸ ಒಲಿದಿತ್ತು.
ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಖಾತೆಯೊಂದಿಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನು ಅವರು ವಹಿಸಿಕೊಂಡಿದ್ದರು. ಆದರೆ, ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಯಿತು. ಕೆಲ ದಿನಗಳಿಂದ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಿಲ್ಲದೇ ಅನಾಥ ಭಾವ ಕಾಡುತ್ತಿತ್ತು.
ಈ ನಡುವೆ ಲೋಕಸಭೆ ಚುನಾವಣೆ ಹಿನ್ನೆಲೆ ನೀತಿಸಂಹಿತೆ ಜಾರಿಯಿಂದಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆ ಉಂಟಾಗಿತ್ತು. ಜೂ.21 ರಂದು ವಿಜಯನಗರ ಜಿಲ್ಲೆ ಹೊಸಪೇಟೆಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಬಳ್ಳಾರಿ ಜಿಲ್ಲೆಉಸ್ತುವಾರಿಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ವಹಿಸುವುದಾಗಿ ತಿಳಿಸಿದ್ದರು. ಈ ಬಗ್ಗೆ ಸರಕಾರದಿಂದ ಶುಕ್ರವಾರ ಅಧಿಕೃತ ಆದೇಶ ಹೊರಡಿಸಲಾಗಿದೆ.